ವಿಜಯ ದರ್ಪಣ ನ್ಯೂಸ್…..
ವರದಕ್ಷಿಣೆ ವಿರುದ್ಧ ಜಾಗೃತರಾಗಿರಿ: ಮಂಜುಳಾ ಮಾನಸ

ಮೈಸೂರು ತಾಂಡವಪುರ ಜನವರಿ 28 ವರದಕ್ಷಿಣೆಯಂತಹ ಸಾಮಾಜಿಕ ಕೆಡುಕುಗಳ ವಿರುದ್ಧ ವಿದ್ಯಾರ್ಥಿನಿಯರು ಜಾಗೃತರಾಗಬೇಕು ಎಂದು ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಮಂಜುಳಾ ಮಾನಸ ಕಿವಿಮಾತು ಹೇಳಿದರು.
ನಗರದ ಮಹಾರಾಣಿಯರ ವಿಜ್ಞಾನ ಮಹಿಳಾ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿ ಹಾಗೂ ವಿದ್ಯಾರ್ಥಿ ಕಲ್ಯಾಣ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವರದಕ್ಷಿಣೆ ನಿಷೇಧ ಕಾಯ್ದೆಯ ಉದ್ದೇಶ, ಅದರ ಕಾನೂನು ಅಂಶಗಳು ಹಾಗೂ ಮಹಿಳೆಯರ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ವರದಕ್ಷಿಣೆಯಂತಹ ಸಾಮಾಜಿಕ ಕೆಡುಕುಗಳ ವಿರುದ್ಧ ವಿದ್ಯಾರ್ಥಿನಿಯರು ಜಾಗೃತರಾಗಬೇಕು ಹಾಗೂ ಕಾನೂನಿನ ಅರಿವು ಹೊಂದುವುದು ಅತ್ಯವಶ್ಯಕ ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಅನ್ಯಾಯಗಳನ್ನು ತಡೆಯಲು ಕಾನೂನುಗಳ ಜ್ಞಾನ ಮತ್ತು ಧೈರ್ಯ ಅಗತ್ಯವೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ.ಎಂ.ಅಬ್ದುಲ್ ರಹಿಮಾನ್, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೊ.ರಾಜೇಶ್ವರಿ, ಡಾ.ಜೆ.ಪ್ರೀತಿ ಎನ್.ತಲ್ಲೂರು, ಪ್ರೊ.ಎಂ.ಸಿ.ಸುಧಾ, ಪ್ರೊ.ಎನ್.ಕೆ.ಲೀಲಾವತಿ, ಪ್ರೊ.ಶೋಭಾ, ಡಾ.ನಮ್ರತಾ ಇತರರು ಉಪಸ್ಥಿತರಿದ್ದರು.








