ವಿಜಯ ದರ್ಪಣ ನ್ಯೂಸ್….
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜೂ.30 ರಿಂದ ಬಿಎಲ್ಒ ಗಳು ಮನೆ ಮನೆ ಭೇಟಿ:ಡಿಸಿ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.29:
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ತಿಳಿಸಿದ್ದಾರೆ.
ಚುನಾವಣೆಗೆ ಕಾಲಕಾಲಕ್ಕೆ ನಡೆಸುವ ಕಾನೂನು ಕ್ರಮ ಬದ್ಧ ಪ್ರಕ್ರಿಯೆ ಇದಾಗಿದ್ದು ಜೂನ್ 30 ರಿಂದ ಜುಲೈ 29 ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಓ) ಮನೆಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮನೆಗೆ ಭೇಟಿ ನೀಡುವ ಅಧಿಕಾರಗಳು ನಿಗದಿತ ನಮೂನೆಗಳನ್ನು ನೀಡಿ ಭರ್ತಿ ಮಾಡಿಕೊಳ್ಳುತ್ತಾರೆ. ಹೊಸ ಹೆಸರುಗಳ ಸೇರ್ಪಡೆ, ನಿಧನರಾದವರು, ವಲಸಿಗರ ಹೆಸರುಗಳನ್ನು ಮತಪಟ್ಟಿಯಿಂದ ಪರಿಷ್ಕರಣೆ ಮಾಡಲಾಗುತ್ತದೆ. ಜೊತೆಗೆ ಎರಡೆರಡು ಕಡೆ ಹೆಸರು ಇದ್ದಲ್ಲಿ ಒಂದು ಕಡೆ ಮಾತ್ರ ಉಳಿಸುವ ಪ್ರಕ್ರಿಯೆ ನಡೆಯುತ್ತದೆ. ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಕೂಡ ಅವಕಾಶವಿದೆ.
ಮನೆಗೆ ಬರುವ ಬಿಎಲ್ಒಗಳು ಎರಡು ಅರ್ಜಿಗಳನ್ನು (ಎನ್ಯುಮರೇಶನ ಫಾರ್ಮ್) ನೀಡುತ್ತಾರೆ. ಮತದಾರರು ಎರಡನ್ನು ಭರ್ತಿ ಮಾಡಿ ಸಹಿ ಮಾಡಬೇಕು. ಒಂದನ್ನು ಸ್ವೀಕೃತಿಯಾಗಿ ಮತದಾರರಿಗೆ ಮರಳಿಸಿದರೆ, ಇನ್ನೊಂದು ಪ್ರತಿಯನ್ನು ಅಧಿಕಾರಿಗಳು ತೆಗೆದುಕೊಂಡು ಹೋಗುತ್ತಾರೆ. ಅದನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹ ಮಾಡುತ್ತಾರೆ.
ಮತದಾರರ ಪಟ್ಟಿ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆಗಾಗಿ ಜಿಲ್ಲೆಯಾದ್ಯಂತ 1147 ಮತಗಟ್ಟೆ ಮಟ್ಟದ ಅಧಿಕಾರಿಗಳು ತೊಡಗಿಸಿಕೊಳ್ಳಲಿದ್ದಾರೆ. ಜಿಲ್ಲೆಯ 9,12,913 ಮತದಾರರನ್ನು ಈ ವಿಶೇಷ ಪರಿಷ್ಕರಣೆಗೆ ಒಳಪಡಿಸಲಾಗುತ್ತದೆ. ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೈಗೊಳ್ಳಲು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳಲಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ರಾಜಕೀಯ ಪಕ್ಷಗಳ ಏಜೆಂಟರು ನೆರವಾಗಲಿದ್ದಾರೆ.
*ಆಕ್ಷೇಪಣೆ ಸಲ್ಲಿಸಲು ಅವಕಾಶ* ನಮೂನೆಗಳನ್ನು ಪಡೆದುಕೊಂಡ ನಂತರ ಅವುಗಳನ್ನು ಪರಿಶೀಲಿಸಿ ಕರಡು ಮತದಾರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ವಿವರ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ಅದನ್ನು ಪರಿಶೀಲಿಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಬಿಟ್ಟು ಹೋಗಿದ್ದರೆ ಮತದಾರರು ಜಿಲ್ಲಾಧಿಕಾರಿ ಹಂತದ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು. ನಂತರದ ಹಂತದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
ವಿವರಗಳು ವ್ಯತ್ಯಾಸವಿದ್ದರೆ ನೋಟಿಸ್
2025ರ ಮತ್ತು 2002ರ ಮತದಾರ ಪಟ್ಟಿ ಎರಡರಲ್ಲೂ ಮತದಾರರ ಹೆಸರಿದ್ದು ಎರಡರ ಮತದಾರ ಪಟ್ಟಿಯಲ್ಲಿ ಮತದಾರರ ಅಥವಾ ಅವರ ಪೋಷಕರ ವಿವರ ಇಲ್ಲದೆ ಇದ್ದರೂ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಪಡೆದವರು ಪಟ್ಟಿಯಿಂದ ಹೆಸರು ಕೈಬಿಡಲಾಗುವುದು ಎಂದರ್ಥವಲ್ಲ. ನೋಟಿಸ್ ಪಡೆದುಕೊಂಡವರು ಅಗತ್ಯ ದಾಖಲೆಗಳನ್ನು ಒದಗಿಸಿದರೆ ಆ ಪೈಕಿ ಅರ್ಹರನ್ನು ಕರಡು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ.
ಎಸ್ಐಆರ್ ವೇಳಾಪಟ್ಟಿ ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಿಸಿ ಸಂಗ್ರಹಿಸಲಿದ್ದಾರೆ. ನಂತರ ಆಗಸ್ಟ್ 05 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಆಗಲಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 05 ರಿಂದ ಸೆಪ್ಟೆಂಬರ್ 4 ವರೆಗೆ ಅವಕಾಶ. ಸೆಪ್ಟೆಂಬರ್ 7 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುವುದು.
ಸಾರ್ವಜನಿಕರ ಸಹಕಾರ
ಮನೆಮನೆಗೆ ಭೇಟಿ ನೀಡುವ ಅಧಿಕಾರಿಗಳಿಂದ ಎರಡು ನಿಗದಿತ ಅರ್ಜಿ ಫಾರಂ ಪಡೆದು ಅದನ್ನು ತುಂಬಿಸಿ ಈ ಪೈಕಿ ಒಂದನ್ನು ನೀವು ದಾಖಲಾಗಿಟ್ಟುಕೊಂಡು. ಇನ್ನೊಂದನ್ನು ಅಧಿಕಾರಿಗಳಿಗೆ ಮರಳಿಸಿ. ಈ ವೇಳೆ ಹೊಸ ಹೆಸರು ಸೇರ್ಪಡೆ ಮಾಡುತ್ತಿದ್ದರೆ, ಹೆಸರೂತಿದ್ದುಪಡಿಮಾಡಿಸಬಹುದು. ಅಧಿಕಾರಿಗಳ ಜೊತೆಗೆ ನೆರವಿಗೆ ರಾಜಕೀಯ ಪಕ್ಷಗಳ ನೋಂದಾಯಿತ ಏಜೆಂಟು ಆಗಮಿಸುತ್ತಾರೆ. ಅಧಿಕಾರಿಗಳ ಪ್ರತಿಯನ್ನು ಸ್ಕ್ಯಾನ್ ಮಾಡಿ ಅದನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗುತ್ತದೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗದಿಂದ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಈ ವೇಳೆ ಹೆಸರು ಬಿಟ್ಟು ಹೋಗಿದ್ದರೆ ನಿಮ್ಮ ಬಳಿ ಇರುವ ದಾಖಲೆ ತೋರಿಸಿ ಮರಳಿ ಸೇರಿಸಬಹುದು. ಅನರ್ಹರನ್ನು ಪಟ್ಟಿಯಿಂದ ಬಿಟ್ಟು, ಅರ್ಹರಿಗೆ ಮತದಾರರ ಪಟ್ಟಿಯಲ್ಲಿ ಅವಕಾಶ ಕಲ್ಪಿಸುವುದು ಇದರ ಮೂಲ ಉದ್ದೇಶವಾಗಿದ್ದು ಸಾರ್ವಜನಿಕರು ಆತಂಕಪಡದೇ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









