ವಿಜಯ ದರ್ಪಣ ನ್ಯೂಸ್….
ವೀರಾಪುರ ರೈಲ್ವೆ ಅಂಡರ್ಪಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಸೂಚನೆ : ಶಾಸಕ ಬಿ.ಎನ್.ರವಿಕುಮಾರ್

ಶಿಡ್ಲಘಟ್ಟ : ರಾಷ್ಟ್ರೀಯ ಹೆದ್ದಾರಿ-234ರ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗ ಮಧ್ಯೆ ವೀರಾಪುರ ಬಳಿ ರೈಲ್ವೆ ಅಂಡರ್ಪಾಸ್ನಲ್ಲಿ ಮಳೆ ನೀರು ಹರಿದು ಹೋಗಲು ಅಳವಡಿಸಿರುವ ಕಬ್ಬಿಣದ ಸರಳುಗಳ ವೆಲ್ಡಿಂಗ್ ಪದೇಪದೆ ಕಿತ್ತು ಬಂದು ಕಬ್ಬಿಣದ ಸರಳುಗಳು ಮೇಲ್ಮುಖವಾಗಿ ನಿಂತು ಸಂಚಾರಕ್ಕೆ ಅಡಚಣೆ ಆಗಿತ್ತಲ್ಲದೆ, ಕಳೆದ ಐದಾರು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದರಿಂದ ರೈಲ್ವೆ ,ಹೆದ್ದಾರಿ ಅಧಿಕಾರಿಗಳು ಹಾಗು ಶಾಸಕರು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ರಾಷ್ಟ್ರೀಯ ಹೆದ್ದಾರಿ-234ರ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗ ಮಧ್ಯೆ ವೀರಾಪುರ ಬಳಿ ರೈಲ್ವೆ ಅಂಡರ್ಪಾಸ್ನ ಕಬ್ಬಿಣದ ಸರಳುಗಳು ಪದೇ ಪದೇ ಕಿತ್ತು ಬಂದು ವಾಹನ ಸಂಚಾರಕ್ಕೆ ಅಡಚಣೆ, ಅಪಘಾತಗಳಿಗೆ ಕಾರಣವಾಗುತ್ತಿದ್ದು ಸ್ಥಳಕ್ಕೆ ಶಾಸಕ ಬಿ.ಎನ್. ರವಿಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರೈಲ್ವೆ ಇಲಾಖೆ ಅಧಿಕಾರಿಗಳು, ಪೊಲೀಸರೊಂದಿಗೆ ಭೇಟಿ ನೀಡಿದರು.
ತಾತ್ಕಾಲಿಕವಾಗಿ ವೆಲ್ಡಿಂಗ್ ಮಾಡುವ ಕಾರ್ಯ ನಡೆಸಿದರಾದರೂ ಒಂದೇ ದಿನದಲ್ಲಿ ವೆಲ್ಡಿಂಗ್ ಕಿತ್ತು ಬಂದು ಸಮಸ್ಯೆ ಮುಂದುವರೆದಿತ್ತು ಸಮಸ್ಯೆ ನಿವಾರಿಸುವಂತೆ ವೀರಾಪುರ, ತಲದುಮ್ಮನಹಳ್ಳಿ ಗ್ರಾಮಸ್ಥರು ಪೊಲೀಸರು, ರೈಲ್ವೆ ಮತ್ತು ಹೆದ್ದಾರಿ ಪ್ರಾಧಿ ಕಾರದ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.
ಜತೆಗೆ ಸಮಸ್ಯೆ ಕುರಿತು ಶಾಸಕರ ಗಮನ ಸೆಳೆಯಲಾಗಿತ್ತು
ಈ ಹಿನ್ನೆಲೆಯಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಅವರು ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮತ್ತೆ ಮತ್ತೆ ಸಮಸ್ಯೆ ಪುನರಾವರ್ತಿಸದಂತೆ ಶಾಶ್ವತವಾಗಿ ದುರಸ್ತಿ ಕೈಗೊಳ್ಳುವ ಬಗ್ಗೆ ಕೆಲ ಕಾಲ ಚರ್ಚಿಸಿದರು.
ಯಾವ ರೀತಿಯ ದುರಸ್ತಿ ಮಾಡಿದರೆ ಮಳೆ ನೀರು ಸರಾಗವಾಗಿ ಹರಿದು ಹೋಗಬೇಕು, ಕಬ್ಬಿಣದ ಸರಳುಗಳು ಮತ್ತೆ ಕಿತ್ತು ಬರಬಾರದು, ಸಂಚಾರಕ್ಕೆ ಯಾವುದೇ ತೊಂದರೆ ಆಗಬಾರದು, ರೈಲ್ವೆ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡುವೆ ಸಮನ್ವಯ ಸಾಧಿಸಿಕೊಂಡು ದುರಸ್ತಿ ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಶಾಸಕರು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ದುರಸ್ತಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರಾದ ಬಿ.ಎನ್.ರವಿಕುಮಾರ್, ವೀರಾಪುರ ರೈಲ್ವೆ ಅಂಡರ್ಪಾಸ್ನಲ್ಲಿ ಹಲವು ಅಪಘಾತಗಳೂ ಸಂಭವಿಸಿರುವುದು ಗಂಭೀರ ವಿಷಯವಾಗಿದೆ ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಎಂಜಿನಿಯರ್ಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಯ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ದೀರ್ಘಕಾಲದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತಕ್ಷಣವೇ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಲಾಗಿದೆ ,ಕೇವಲ ತಾತ್ಕಾಲಿಕ ದುರಸ್ತಿಗೆ ಸೀಮಿತವಾಗದೆ, ಭವಿಷ್ಯದಲ್ಲಿ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸುವ ರೀತಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ವಿವರಿಸಿದರು.
ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಮುಂದಿನ 25 ವರ್ಷದ ಒಳಗೆ ಯಾವುದೇ ಸಮಸ್ಯೆ ಬರದಂತೆ ಗುಣಮಟ್ಟದ ಕಾಮಗಾರಿ ನಡೆಸಬೇಕು ಅದಕ್ಕಾಗಿ ತಗಲುವ ವಿಶೇಷ ಅನುದಾನವನ್ನು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ “ಡಿಎಂಎಫ್ಟಿ ಫಂಡ್” ಮೂಲಕ ನೆರವು ಒದಗಿಸಲಾಗುವುದು ಎಂದು ಅಧಿಕಾರಿಗಳಿಗೆ ಶಾಸಕರು ಭರವಸೆ ನೀಡಿದರು.
ಈ ವೇಳೆ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಮೊಬೈಲ್ ಮೂಲಕ ಸಂಪರ್ಕ ಮಾಡಿ ತಾಲೂಕಿನಲ್ಲಿ ದಿಬ್ಬೂರಹಳ್ಳಿ ರಸ್ತೆ, ಇದ್ಲೂಡು ರಸ್ತೆ ಹಾಗೂ ಇನ್ನಿತರೆ ಭಾಗಗಳಲ್ಲಿ ಕೆಳ ಸೇತುವೆ ಅವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿಹೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈಲ್ವೆ ಕಿರಿಯ ಅಭಿಯಂತರರು ಶುಭಂ, ರಾಷ್ಟ್ರೀಯ ಹೆದ್ದಾರಿಯಾ ರಾಜಾರೆಡ್ಡಿ, ಸಹಾಯಕ ಇಂಜಿನಿಯರ್ ನವೀನ್, ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್, ರೈತ ಮುಖಂಡ ವೀರಾಪುರ ಮುನಿನಂಜಪ್ಪ, ತಲದುಮ್ಮನಹಳ್ಳಿ ಹಾಗೂ ವೀರಾಪುರ ಗ್ರಾಮಸ್ಥರು ಹಾಜರಿದ್ದರು.









