ವಿಜಯ ದರ್ಪಣ ನ್ಯೂಸ್……
ಭಾರತೀಯ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಡಾ. ಶಿವಕುಮಾರ್ ಚಕ್ರವರ್ತಿ 45ನೇ ಹುಟ್ಟುಹಬ್ಬ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಬಳಿ ಇರುವ ಭಾರತೀಯ ಅಂಬೇಡ್ಕರ್ ಸೇನೆಯ ಕೇಂದ್ರ ಕಚೇರಿಯಲ್ಲಿ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ. ಶಿವಕುಮಾರ್ ಚಕ್ರವರ್ತಿ ಅವರ 45ನೇ ಹುಟ್ಟುಹಬ್ಬವನ್ನು ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅನ್ನದಾಸೋಹ ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಬಡವರು, ನಿರ್ಗತಿಕರು ಹಾಗೂ ಸಾರ್ವಜನಿಕರಿಗೆ ಅನ್ನದಾಸೋಹ ನಡೆಸಿ ಸಮಾಜಸೇವೆಯ ಸಂದೇಶ ಸಾರಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಶಿವಕುಮಾರ್ ಚಕ್ರವರ್ತಿ ಅವರು, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಮತ್ತು ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಶೋಷಿತರು, ದೀನದಲಿತರು ಹಾಗೂ ನೊಂದವರಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಭಾರತೀಯ ಅಂಬೇಡ್ಕರ್ ಸೇನೆ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ಸಮಾನತೆ, ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಸಾಮಾಜಿಕ ನ್ಯಾಯ ಸ್ಥಾಪಿಸುವ ನಿಟ್ಟಿನಲ್ಲಿ ಸಂಘಟನೆ ನಿರಂತರ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ಈ ವೇಳೆ ಸಂಘದ ಪದಾಧಿಕಾರಿ ವಿನೋದ್ ಮಾತನಾಡಿ, “ಡಾ. ಶಿವಕುಮಾರ್ ಚಕ್ರವರ್ತಿ ಅವರು ಕೇವಲ ಸಂಘಟನೆಯ ನಾಯಕ ಮಾತ್ರವಲ್ಲ, ಸಾವಿರಾರು ಯುವಕರಿಗೆ ಸ್ಪೂರ್ತಿದಾಯಕ ವ್ಯಕ್ತಿತ್ವವಾಗಿದ್ದಾರೆ. ಅವರು ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದು, ಸಮಾಜದ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ನೇತೃತ್ವದಲ್ಲಿ ಭಾರತೀಯ ಅಂಬೇಡ್ಕರ್ ಸೇನೆ ರಾಜ್ಯದಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳು, ರಕ್ತದಾನ ಶಿಬಿರಗಳು, ಉಚಿತ ಆರೋಗ್ಯ ತಪಾಸಣೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ.
ಡಾ. ಶಿವಕುಮಾರ್ ಚಕ್ರವರ್ತಿ ಅವರ ಜನ್ಮದಿನವನ್ನು ಆಡಂಬರದಿಂದ ಆಚರಿಸುವ ಬದಲು ಅನ್ನದಾಸೋಹದಂತಹ ಸೇವಾ ಕಾರ್ಯದ ಮೂಲಕ ಆಚರಿಸಿರುವುದು ಯುವಜನತೆಗೆ ಮಾದರಿಯಾಗಿದೆ. ಮುಂದೆಯೂ ಅವರ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಮತ್ತು ಸೇವೆ ತಲುಪಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುತ್ತೇವೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ವಿವಿಧ ಘಟಕಗಳ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಡಾ. ಶಿವಕುಮಾರ್ ಚಕ್ರವರ್ತಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.








