ವಿಜಯ ದರ್ಪಣ ನ್ಯೂಸ್….
ಪಂಚ ಗ್ಯಾರಂಟಿ ಯೋಜನೆಗಳಿಗೆ ಮೂರು ವರ್ಷ: ತಾವರೆಕೆರೆ ಶಾಲೆಯಲ್ಲಿ ಸಸಿ ನೆಡುವ ಮೂಲಕ ಸಂಭ್ರಮಾಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗಿಡ ನೆಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಅದರ ಅಂಗವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಹೊಸಕೋಟೆ ತಾಲೂಕು ಸಮಿತಿ ಸದಸ್ಯ ಜ್ಞಾನೇಶ್ವರ್ ರಾಜ್ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ, ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಮೂರು ವರ್ಷಗಳ ಯಶಸ್ವಿ ಪಯಣವನ್ನು ಪರಿಸರ ಸ್ನೇಹಿ ಕಾರ್ಯಕ್ರಮದ ಮೂಲಕ ಆಚರಿಸುವುದು ಅರ್ಥಪೂರ್ಣವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳ ಹೊಸಕೋಟೆ ತಾಲೂಕು ಸದಸ್ಯ ಜ್ಞಾನೇಶ್ವರ್ ರಾಜ್ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ಆಶಾದಾಯಕ ಬದಲಾವಣೆ ತಂದಿವೆ.
ಯೋಜನೆಗಳ ಮೂರನೇ ವರ್ಷದ ಸಂಭ್ರಮವನ್ನು ಸಸಿ ನೆಡುವ ಮೂಲಕ ಆಚರಿಸುವುದರಿಂದ ಪರಿಸರ ಸಂರಕ್ಷಣೆಯ ಮಹತ್ವದ ಸಂದೇಶವೂ ಸಮಾಜಕ್ಕೆ ತಲುಪುತ್ತದೆ. ನಂದಗುಡಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿ ನೆಟ್ಟು ಅದೇ ರೀತಿ ಇಂದು ತಾವರೆಕೆರೆ ಗ್ರಾಮದಲ್ಲೂ ಸಸಿ ನೆಟ್ಟಿದ್ದೇವೆ. ಇಂದು ನೆಟ್ಟ ಪ್ರತಿಯೊಂದು ಸಸಿಯೂ ಮುಂದಿನ ಪೀಳಿಗೆಗೆ ಅಮೂಲ್ಯವಾದ ಹಸಿರು ಸಂಪತ್ತಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಪ್ರವೀಣ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪವಿತ್ರ ಮಂಜುನಾಥ್, ವಿಲೇಜ್ ಅಕೌಂಟೆಂಟ್ ಶ್ಯಾಮ್, ಕರ ವಸೂಲಿಗಾರ ರಾಜಣ್ಣ ಪಂಚಾಯಿತಿ ಸಿಬ್ಬಂದಿ ಬಚ್ಚೇಗೌಡ, ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.








