ವಿಜಯ ದರ್ಪಣ ನ್ಯೂಸ್…..
ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.24: ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು.
ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಎಲ್ಲ ಸದಸ್ಯರಿಗೆ ಮುಕ್ತ ಮನಸ್ಸಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದ್ದೆ. ನನಗೆ ಯಾವುದೇ ಸಂಕೋಚ ಅಥವಾ ದ್ವೇಷವಿಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡೋಣ ಎಂದು ಹೇಳಿದ್ದೆ. ಚುನಾವಣೆ ಬಂದಾಗ ಚುನಾವಣೆ ಮಾಡೋಣ, ಆದರೆ ಸದನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಸಮಗ್ರ ವರದಿ ನೀಡಿದ್ದಾರೆ. ಬೆಳಗಾವಿ, ಕಲಬುರಗಿ ಹಾಗೂ ಚಿತ್ರದುರ್ಗ ಸೇರಿದಂತೆ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಸಚಿವರಿಗೂ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ವರದಿ ನೀಡುವಂತೆ ಸೂಚಿಸಲಾಗಿದ್ದು, ಅದರ ಆಧಾರದ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ. 1 ಕೋಟಿ ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೂ ಪ್ರತ್ಯೇಕವಾಗಿ ಅಗತ್ಯ ಹಣಕಾಸು ಒದಗಿಸಲಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬರದ ಬಗ್ಗೆ ಚರ್ಚೆ ನಡೆಸುವ ಬದಲು ವಿರೋಧ ಪಕ್ಷ ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ನಾಗೇಂದ್ರ ರಾಜೀನಾಮೆ ವಿಚಾರ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಈ ಕುರಿತು ನೋಟಿಸ್ ನೀಡಿ, ಚರ್ಚೆ ನಡೆಸಬೇಕು. ತನಿಖೆ ನಡೆಸಲಾಗಿದ್ದು, ವರದಿಯೂ ಬಂದಿದೆ. ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆಯೂ ನಡೆದಿದೆ. ಈ ಎಲ್ಲ ವಿವರಗಳನ್ನು ಸದನದಲ್ಲಿ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸಿಬಿಐ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ತನಿಖೆ ನಡೆಸಿವೆ. ಇದುವರೆಗೆ ನಾಗೇಂದ್ರ ಅವರು ನೇರವಾಗಿ ತಪ್ಪಿತಸ್ಥರು ಎಂದು ತೋರಿಸುವ ದಾಖಲೆಗಳು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸದೆ ಸದನದ ಕಲಾಪಕ್ಕೆ ಅಡ್ಡಿಪಡಿಸುವುದು ಸೂಕ್ತವಲ್ಲ ಎಂದರು.
ಕೆಪಿಎಸ್ಸಿ ನೇಮಕಾತಿ ಅಕ್ರಮದ ತನಿಖೆ
ಕೆಪಿಎಸ್ಸಿ ವಿಚಾರದಲ್ಲಿಯೂ ತನಿಖೆ ನಡೆಯುತ್ತಿದೆ. ಹಿಂದಿನ ಅವಧಿಯಲ್ಲಿ ನಡೆದ ನೇಮಕಾತಿ ಮತ್ತು ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯವೂ ತನಿಖೆಗೆ ಪ್ರವೇಶಿಸಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಂಪುಟದಿಂದಲೂ ಅಗತ್ಯ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಯುವಕರ ಭವಿಷ್ಯದ ಬಗ್ಗೆ ಚರ್ಚೆಯಾಗಲಿ
ದೇಶದ ಯುವಕರು ಮತ್ತು ವಿದ್ಯಾರ್ಥಿಗಳ ಭವಿಷ್ಯ ರಾಷ್ಟ್ರದ ಆಸ್ತಿ. ಅವರಿಗೆ ನ್ಯಾಯ ಒದಗಿಸುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಯುವಕರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯಬೇಕಿತ್ತು ಎಂದು ಹೇಳಿದರು.
ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ, ಯುವಕರ ಸಮಸ್ಯೆಗಳನ್ನು ಚರ್ಚಿಸುವ ಬದಲು ರಾಜಕಾರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ದೇಶದಾದ್ಯಂತ ಯುವಕರು ಉದ್ಯೋಗದ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿರುವ ಯುವಕರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾದನೀಯ. ಇಂತಹ ಘಟನೆಗಳು ಯುವ ಸಮುದಾಯಕ್ಕೆ ಯಾವ ಸಂದೇಶ ನೀಡುತ್ತವೆ ಎಂಬುದನ್ನು ಸರ್ಕಾರಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಸರ್ಕಾರ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ 72 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು.
“ನಾವು ಹೊಸ ಯುಗಕ್ಕೆ ಕಾಲಿಟ್ಟಿದ್ದೇವೆ. ಇಂದಿನ ಯುವಕರು ವಿದ್ಯಾವಂತರು, ಬುದ್ಧಿವಂತರು ಹಾಗೂ ಪ್ರಜ್ಞಾವಂತರು. ಅವರ ಭವಿಷ್ಯದ ಬಗ್ಗೆ ಚಿಂತಿಸುವುದು ಸರ್ಕಾರಗಳ ಆದ್ಯತೆಯಾಗಬೇಕು. ಆದರೆ ಯುವಕರ ಭವಿಷ್ಯದ ಕುರಿತು ಚರ್ಚಿಸುವುದನ್ನು ಬಿಟ್ಟು ರಾಜಕೀಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವುದು ಬೇಸರದ ಸಂಗತಿ” ಎಂದು ಅವರು ಹೇಳಿದರು.
ಯುವಕರಿಗೆ ಉದ್ಯೋಗ, ಶಿಕ್ಷಣ ಮತ್ತು ಉತ್ತಮ ಭವಿಷ್ಯ ಒದಗಿಸುವ ಕುರಿತು ವಿಧಾನಸಭೆಯಲ್ಲಿ ರಚನಾತ್ಮಕ ಚರ್ಚೆ ನಡೆಯಬೇಕಿದೆ. ಹೊಸ ಪೀಳಿಗೆಗೆ ಸರ್ಕಾರಗಳು ನೀಡುವ ಸಂದೇಶವೂ ಜವಾಬ್ದಾರಿಯುತವಾಗಿರಬೇಕು ಎಂದರು.
ಕಾವೇರಿ, ರೈತರ ಹಿತಕ್ಕೆ ಸರ್ಕಾರ ಬದ್ಧ: ರಾಜ್ಯದ ಹಕ್ಕಿಗಾಗಿ ಕೇಂದ್ರದ ಮೇಲೆ ಸಿಎಂ ಒತ್ತಡ
ಕಾವೇರಿ ನೀರು, ಬರಗಾಲ, ರೈತರ ಭೂಸ್ವಾಧೀನ, ಕೇಂದ್ರದ ನೀರಾವರಿ ಅನುದಾನ ಹಾಗೂ ಮತದಾರರ ಹಕ್ಕು ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳಲ್ಲಿ ಸರ್ಕಾರ ರಾಜ್ಯದ ಹಿತ ಕಾಪಾಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ವಿಧಾನಸಭೆಯಲ್ಲಿ ಇಂತಹ ವಿಷಯಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಯಬೇಕು. ರಾಜಕೀಯ ಆರೋಪ–ಪ್ರತ್ಯಾರೋಪಗಳಿಗಿಂತ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದು ಅವರು ತಿಳಿಸಿದರು.
ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶಗಳು ಹಾಗೂ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದ ಹಿತ ಕಾಪಾಡಲು ಎಲ್ಲ ಪಕ್ಷಗಳ ಸಹಕಾರ ಅಗತ್ಯವಾಗಿದೆ. ಮಳೆ ಕೊರತೆ ಮತ್ತು ಬರದ ಪರಿಸ್ಥಿತಿಯಲ್ಲಿ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ನೆರವು ನೀಡಲು ಸರ್ಕಾರ ಈಗಾಗಲೇ ಅಣೆಕಟ್ಟುಗಳಿಗೆ ತೆರಳಿ ಸಭೆ ನಡೆಸಿದೆ. ರೈತರನ್ನು ಉಳಿಸಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ವಿರೋಧ ಪಕ್ಷಗಳು ಸಲಹೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಇತ್ತೀಚೆಗೆ ಚೆನ್ನೈನಲ್ಲಿ ಕೇಂದ್ರ ಗೃಹ ಸಚಿವರು ಕರೆದಿದ್ದ ಸಭೆಯಲ್ಲಿ ರಾಜ್ಯದ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ, ಅದರ ನೀರನ್ನು ಬೆಂಗಳೂರು ಕುಡಿಯುವ ನೀರಿನ ಅಗತ್ಯ ಸೇರಿದಂತೆ ರಾಜ್ಯದ ಹಿತಕ್ಕಾಗಿ ಬಳಸಬೇಕೆಂಬ ನಿಲುವನ್ನು ತಮಿಳುನಾಡಿನಲ್ಲಿಯೇ ಸ್ಪಷ್ಟವಾಗಿ ಪ್ರತಿಪಾದಿಸಿದ್ದೇನೆ ಎಂದು ಹೇಳಿದರು.
ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ಕೇಂದ್ರದ ಮುಂದೆ ಪ್ರಸ್ತಾಪಿಸುವುದು ತಮ್ಮ ಕರ್ತವ್ಯ. ನೀರಾವರಿ ಅಭಿವೃದ್ಧಿ ಮತ್ತು ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯೂ ಕೇಂದ್ರ ಸಚಿವರು ಮತ್ತು ಪ್ರಧಾನಮಂತ್ರಿಗಳ ಮುಂದೆ ಹಲವು ಬಾರಿ ಪ್ರಸ್ತಾಪಿಸಿಲಾಗಿದೆ ಎಂದು ಹೇಳಿದರು.
ರೂ. 5,300 ಕೋಟಿ, ರೂ. 600 ಕೋಟಿ ಅನುದಾನ: ಒಂದು ರೂಪಾಯಿಯೂ ಬಂದಿಲ್ಲ
ಕೇಂದ್ರ ಬಜೆಟ್ನಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ರೂ. 5,300 ಕೋಟಿ ಮತ್ತು ರೂ. 600 ಕೋಟಿ ಅನುದಾನ ನೀಡಲಾಗಿದ್ದರೂ, ಇದುವರೆಗೆ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ ಎಂದು ಮುಖ್ಯಮಂತ್ರಿಯವರು ಹೇಳಿದರು.
ರಾಜ್ಯದ ಪಾಲಿನ ಹಣ ಮತ್ತು ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಸಿಗಬೇಕು. ಈ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಆದರೆ ವಿರೋಧ ಪಕ್ಷಗಳು ಈ ಬಗ್ಗೆ ಮಾತನಾಡದೆ ರಾಜ್ಯದ ಜನತೆಗೆ ದ್ರೋಹ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಪಡಿಸಿದರು.
ಬರ ಪರಿಸ್ಥಿತಿಯನ್ನು ಎದುರಿಸಲು ಮೋಡ ಬಿತ್ತನೆ ಮಾಡುವ ಕುರಿತು ಹಲವು ಶಾಸಕರು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಭೂಸ್ವಾಧೀನ ವಿಚಾರದಲ್ಲೂ ಮುಖ್ಯಮಂತ್ರಿಯವರು ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಸುತ್ತಮುತ್ತ 9,000 ಎಕರೆ ಭೂಮಿಗೆ ಸಂಬಂಧಿಸಿದಂತೆ ಪ್ರಸ್ತಾಪಿಸಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲೇ ಹಲವು ಭೂಸ್ವಾಧೀನ ಪ್ರಕ್ರಿಯೆಗಳು ನಡೆದಿವೆ ಎಂದರು.
ಈ ಕುರಿತು ವಿಧಾನಸಭೆಯಲ್ಲಿ ಮುಕ್ತ ಚರ್ಚೆಗೆ ತಾವು ಸಿದ್ಧರಿದ್ದು, ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳನ್ನು ಕರೆಸಿ ಚರ್ಚಿಸಲು ಸಿದ್ಧವಿದ್ದಾರೆ ಎಂದು ಹೇಳಿದರು.
ರೈತರ ಜಮೀನಿಗೆ ರೂ. 2.5ರೂ. 3 ಕೋಟಿ ಪರಿಹಾರ
ರೈತರ ಭೂಮಿಗೆ ಹಿಂದೆ ರೂ. 25 ಲಕ್ಷ ಮತ್ತು ರೂ. 40 ಲಕ್ಷ ಪರಿಹಾರ ನೀಡಲಾಗಿದೆ. ಆದರೆ ರೈತರ ಹಿತದೃಷ್ಟಿಯಿಂದ ಇದೀಗ ರೂ. 2.5 ಕೋಟಿಯಿಂದ ರೂ. 3 ಕೋಟಿವರೆಗೆ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಯಾವುದೇ ರೈತನ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಸಿದ್ಧವಿಲ್ಲ .
ದೇಶದ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನೆರವು ನೀಡುವ ನೀತಿ ಅಗತ್ಯ. ಹಿಂದಿನ ಯುಪಿಎ ಸರ್ಕಾರದ ಭೂಮಿ ಕಳೆದುಕೊಂಡವರಿಗೆ ಪರಿಹಾರ ಹೆಚ್ಚಿಸುವ ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಅದೇ ಮಾದರಿಯಲ್ಲಿ ರೈತರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ಹೇಳಿದರು.
ಎಸ್ ಐಆರ್ ಕುರಿತು ಸರ್ಕಾರದಿಂದ ಜಾಗೃತಿ
ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಎಸ್ಐಆರ್ ವಿಚಾರವನ್ನು ಪ್ರಸ್ತಾಪಿಸಿದ ಅವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ–ಪಂಗಡಗಳು, ಶಿಕ್ಷಣದ ಅವಕಾಶ ಕಡಿಮೆ ಇರುವವರ ಮತದಾನದ ಹಕ್ಕಿಗೆ ಧಕ್ಕೆಯಾಗಬಾರದು ಹೇಳಿದರು.
ಯಾವುದೇ ಪಕ್ಷದವರಾಗಿದ್ದರೂ ಭವಿಷ್ಯದಲ್ಲಿ ಅರ್ಹ ಮತದಾರರಿಗೆ ತೊಂದರೆಯಾಗದಂತೆ ಎಸ್ಐಆರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರವೇ ಮುಂದಾಗಿದೆ ಎಂದು ಮಾಡಿದರು.
ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಈ ವಿಚಾರದಲ್ಲಿ ಎಲ್ಲ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ.
‘ರಾಜಕಾರಣಕ್ಕಿಂತ ಜನರ ಹಿತ ಮುಖ್ಯ’
“ರಾಜಕಾರಣ ಮುಖ್ಯವಲ್ಲ; ಜನರ ಕಲ್ಯಾಣ ಮುಖ್ಯ. ರೈತರ ಸಮಸ್ಯೆ ಮುಖ್ಯ. ಯುವಕರ ಭವಿಷ್ಯ ಮುಖ್ಯ. ರಾಜ್ಯದ ನೆಲ, ಜಲ ಮತ್ತು ಭಾಷೆ ಮುಖ್ಯ” ಎಂದು ಹೇಳಿದರು.
ವಿಧಾನಸಭೆಯ ಅಮೂಲ್ಯ ದಿನಗಳನ್ನು ಜನರ ಸಮಸ್ಯೆಗಳ ಚರ್ಚೆಗೆ ಬದಲಾಗಿ ರಾಜಕೀಯ ಗದ್ದಲಕ್ಕೆ ಬಳಸಲಾಗುತ್ತಿದೆ. ಇದಕ್ಕೆ ನಾಡಿನ ಜನತೆ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ಮತ್ತು ಎನ್ ಡಿ ಎ ವಿರುದ್ಧ ವಾಗ್ದಾಳಿ ನಡೆಸಿದರು. ಸಭೆಯಲ್ಲಿ ರೈತರು, ಯುವಕರು ಮತ್ತು ರಾಜ್ಯದ ಅಭಿವೃದ್ಧಿ ಕುರಿತು ಸಮಗ್ರ ಚರ್ಚೆ ನಡೆಯಬೇಕಿತ್ತು ಎಂದು ಹೇಳಿದರು.
‘ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ’
ಬಿಜೆಪಿ ಮತ್ತು ಎನ್ಡಿಎಗೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವಿರೋಧ ಪಕ್ಷಗಳಿಗೆ ರಾಜ್ಯ ಹಿತದ ಬಗ್ಗೆ ಚಿಂತನೆ ಇಲ್ಲ. ಜನರು ಅದಕ್ಕೋಸ್ಕರನೇ ನಿಮ್ಮನ್ನು ವಿರೋಧ ಪಕ್ಷದಲ್ಲಿ ಇಟ್ಟಿರೋದು ಎಂದು ಮುಖ್ಯಮಂತ್ರಿ ಅವರು ತರಾಟೆಗೆ ತೆಗೆದುಕೊಂಡರು.
ರಾಜ್ಯದ ಜನರ ಹಿತ, ರೈತರ ಬದುಕು, ಯುವಕರ ಭವಿಷ್ಯ ಮತ್ತು ಕರ್ನಾಟಕದ ನೆಲ–ಜಲ–ಭಾಷೆಯ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದರು.










