ವಿಜಯ ದರ್ಪಣ ನ್ಯೂಸ್…..
ಜಮೀನಿನ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಿಗ 6 ಲಕ್ಷ 50 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಪೊಲೀಸರಿಂದ ಬಂಧನ

ಶಿಡ್ಲಘಟ್ಟ : ಜಮೀನಿನ ಖಾತೆ ಮಾಡಿಕೊಡಲು 6 ಲಕ್ಷ 50 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಜಂಗಮಕೋಟೆ ಹೋಬಳಿಯ ನಾಡಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಲೆಕ್ಕಿಗ ಸಿ.ಮೋಹನ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮದ ಸರ್ವೆ ನಂಬರ್ 298/1ರಲ್ಲಿ 0.144 ಗುಂಟೆ ಜಮೀನಿನ ಖಾತೆ ಮಾಡಿಕೊಡುವಂತೆ ದೂರುದಾರ ಬೈರೇಗೌಡ ಅವರು ಜಂಗಮಕೋಟೆ ನಾಡಕಚೇರಿಯಲ್ಲಿ ಕೆಲಸ ನಿರ್ವಹಿಸುವ ಗ್ರಾಮ ಲೆಕ್ಕಿಗ ಸಿ.ಮೋಹನ್ ಕುಮಾರ್ ಅವರನ್ನು ಸಂಪರ್ಕಿಸಿದ್ದರು,ಈ ವೇಳೆ ಖಾತೆ ಮಾಡಿಕೊಡಲು ಮೊದಲಿಗೆ 7 ಲಕ್ಷ ರೂ.ಗಳ ಹಣಕ್ಕೆ ಬೇಡಿಕೆ ಇಟ್ಟಿದ್ದರು,ನಂತರ ಮಾತುಕತೆಯ ಬಳಿಕ 6 ಲಕ್ಷ 50 ಸಾವಿರ ರೂ.ಗಳ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 3 ಲಕ್ಷ ರೂ.ಗಳಿ ನೀಡುವಂತೆ ಒತ್ತಾಯಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರನ್ನು ಆಧರಿಸಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ.
ಎಸ್ಪಿ ಆಂಟೋನಿ ಜಾನ್ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ವೀರೇಂದ್ರ ಕುಮಾರ್, ಇನ್ಸ್ಪೆಕ್ಟರ್ ಶಿವರಾಜ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.








