ವಿಜಯ ದರ್ಪಣ ನ್ಯೂಸ್….
ಹೆಚ್.ಎನ್.ವ್ಯಾಲಿ ನೀರು ಶಿಡ್ಲಘಟ್ಟ ತಾಲ್ಲೂಕಿನ ಕೆರೆಗಳಿಗೆ ಹರಿಸಬೇಕೆಂದು ಸೆ.7 ರಂದು ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೈಕ್ ರ್ಯಾಲಿ

ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ತಾಲ್ಲೂಕಿನ 24 ಕೆರೆಗಳಿಗೆ ಎಚ್.ಎನ್.ವ್ಯಾಲಿ ನೀರು ಹರಿಸಲಾಗುತ್ತಿದೆ ಆದರೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದ ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ ಆದ್ದರಿಂದ ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ಆದ್ಯತೆಯ ಮೇರೆಗೆ ನೀರು ಹರಿಸಬೇಕು ಎಂದು ಅವರು ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಸೆಪ್ಟೆಂಬರ್ 7ರಂದು ಪ್ರವಾಸಿ ಮಂದಿರದಿಂದ ಬೈಕ್ ರ್ಯಾಲಿ ಆರಂಭಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
“ನಮ್ಮ ನೀರು ನಮ್ಮ ಹಕ್ಕು ಎಚ್.ಎನ್.ವ್ಯಾಲಿ
ನೀರು ನಮ್ಮ ಕೆರೆಗಳಿಗೆ” ಎಂಬ ಘೋಷವಾಕ್ಯದೊಂದಿಗೆ ತಾಲ್ಲೂಕಿನ ಎಲ್ಲ ಕೆರೆಗಳಿಗೂ ಎಚ್.ಎನ್. ವ್ಯಾಲಿ ನೀರು ಹರಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 7ರಂದು ಬೃಹತ್ ಬೈಕ್ ರ್ಯಾಲಿ ಹಾಗೂ ಪ್ರತಿಭಟನೆ ನಡೆಸಲು ವಿವಿಧ ಪ್ರಗತಿಪರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.
ತಾಲ್ಲೂಕಿನ ಮೊದಲ ಹಂತದ ಎಚ್.ಎನ್.ವ್ಯಾಲಿ ಯೋಜನೆಯಡಿ ಒಟ್ಟು ಒಂಬತ್ತು ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿತ್ತು ಕಾಲುವೆ ಹಾಗೂ ಕೆರೆಗಳ ಕಟ್ಟೆಗಳ ಹೂಳೆತ್ತುವ ಕಾಮಗಾರಿ ಪೂರ್ಣಗೊಂಡಿದ್ದರೂ, ಇದುವರೆಗೆ ಸಮರ್ಪಕವಾಗಿ ನೀರು ಹರಿಸಿಲ್ಲ ಮೂರು ಕೆರೆಗಳಿಗೆ ಮಾತ್ರ ನೀರು ಹರಿಸಲಾಗಿದ್ದು, ಉಳಿದ ಕೆರೆಗಳು ಖಾಲಿಯಾಗಿವೆ ಎಂದು ಸಭೆಯಲ್ಲಿ ಮುಖಂಡರು ಆರೋಪಿಸಿದರು.
ಎರಡನೇ ಹಂತದ ಯೋಜನೆಯಡಿ ತಾಲ್ಲೂಕಿನ 45 ಕೆರೆಗಳಿಗೆ ನೀರು ಹರಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಈವರೆಗೆ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಮೊದಲ ಹಂತದ ಯೋಜನೆಯಲ್ಲಿಯೇ ನಿಗದಿತ ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗಿಲ್ಲ ಎಂದು ಮುಖಂಡರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಎಚ್.ಎನ್. ವ್ಯಾಲಿ ಯೋಜನೆಯ ನೀರನ್ನು ಅಕ್ರಮವಾಗಿ ಬಳಸುತ್ತಿರುವ ಬಲಾಡ್ಯರ ವಿರುದ್ಧವೂ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು ಅಲ್ಪ ಪ್ರಮಾಣದಲ್ಲಿ ನೀರು ಬಳಸುವ ರೈತರ ಮೋಟಾರ್ಗಳನ್ನು ತೆರವುಗೊಳಿಸುವ ಅಧಿಕಾರಿಗಳು, ನೂರಾರು ಎಕರೆ ಪ್ರದೇಶಕ್ಕೆ ಅಕ್ರಮವಾಗಿ ನೀರು ಬಳಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮುಖಂಡರು ಆರೋಪಿಸಿದರು.
ಸುಮಾರು 5 ಕೋಟಿ ರೂ.ಗಳ ವೆಚ್ಚದಲ್ಲಿ 200 ಅಡಿ ಆಳಕ್ಕೆ ಪಂಪ್ ಅಳವಡಿಸಿ ಸುಮಾರು 250 ಎಕರೆ ಭೂಮಿಗೆ ನೀರು ಹಾಯಿಸಲಾಗುತ್ತಿದೆ ಎಂಬ ಆರೋಪವಿದ್ದು, ಈ ಕುರಿತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಅಕ್ರಮ ನೀರು ಬಳಕೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಎತ್ತಿನಹೊಳೆ ಯೋಜನೆಯ ವಿಳಂಬದ ಬಗ್ಗೆಯೂ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು ಹಲವು ವರ್ಷಗಳಿಂದ ಯೋಜನೆ ಪೂರ್ಣಗೊಳ್ಳುವ ಕುರಿತು ವಿವಿಧ ಅವಧಿಗಳ ಭರವಸೆ ನೀಡಲಾಗುತ್ತಿದ್ದರೂ, ಇನ್ನೂ ಅನಿಶ್ಚಿತತೆ ಮುಂದುವರಿದಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನ ದ್ವಿತೀಯ ಹಂತದ ಸಂಸ್ಕರಿಸಿದ ನೀರನ್ನಾದರೂ ತಾಲ್ಲೂಕಿನ ಕೆರೆಗಳಿಗೆ ಶೇ 30ರಿಂದ 50ರಷ್ಟು ಹರಿಸಬೇಕು ಎಂದು ಒತ್ತಾಯಿಸಲಾಯಿತು.
ಕಾಲುವೆಗಳಲ್ಲಿ ಗಿಡಗಂಟೆಗಳು ಬೆಳೆದು ನೀರು ಸರಾಗವಾಗಿ ಹರಿಯದ ಸ್ಥಿತಿ ನಿರ್ಮಾಣವಾಗಿದೆ ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾಡಳಿತ ಕಾಲುವೆಗಳನ್ನು ತಕ್ಷಣ ಸ್ವಚ್ಛಗೊಳಿಸಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.
ಕೆರೆಗಳಿಗೆ ನೀರು ಹರಿಸಿದರೆ ಅಂತರ್ಜಲ ಮಟ್ಟ ಹೆಚ್ಚಳವಾಗಿ ಬೋರ್ ವೆಲ್ಗಳ ಮರುಪೂರಣಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.
ಸೆಪ್ಟೆಂಬರ್. 7ರ ಹೋರಾಟದಲ್ಲಿ ತಾಲ್ಲೂಕಿನ ರೈತರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮುಖಂಡರು ಕರೆ ನೀಡಿದರು.
ಪೂರ್ವಬಾವಿ ಸಭೆಯಲ್ಲಿ ರೈತ ಸಂಘಟನೆಗಳ ಮುಖಂಡರಾದ ಶೆಟ್ಟಿಹಳ್ಳಿ ರವಿಪ್ರಕಾಶ್, ಟಿ.ಕೆ.ಅರುಣ್ ಕುಮಾರ್, ಬೆಳ್ಳೂಟಿ ಮುನಿಕೆಂಪಣ್ಣ, ಕೋಟೆ ಚೆನ್ನೇಗೌಡ,
ಜಯಂತಿಗ್ರಾಮ ನಾರಾಯಣಸ್ವಾಮಿ,ದ್ಯಾವಪ್ಪ, ಬಿ.ಪ್ರತೀಶ್, ನಾರಾಯಣಸ್ವಾಮಿ, ಶ್ರೀನಿವಾಸ್, ಶಂಕರ್ ನಾರಾಯಣ, ಹಾಗೂ ದಲಿತ ಸಂಘಟನೆಗಳ ಮುಖಂಡರಾದ ಈ ಧರೆ ಪ್ರಕಾಶ್, ಗೊರ್ಲಪ್ಪ ಮತ್ತಿತರರು ಹಾಜರಿದ್ದರು.








