ವಿಜಯ ದರ್ಪಣ ನ್ಯೂಸ್….
ಎಸಿ ರೂಂನಲ್ಲಿ ಕೂರಬೇಡಿ, ಫೀಲ್ಡಿಗಿಳಿಯಿರಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಚಾಟಿ

ಕೆಲಸ ಮಾಡದ ಅಧಿಕಾರಿ ಸಸ್ಪೆಂಡ್: ಕಾವೇರಿ ನಿಗಮ ಸಭೆಯಲ್ಲಿ ಸಚಿವರ ಖಡಕ್ ವಾರ್ನಿಂಗ್
112 ಟಿಎಂಸಿ ಕಾವೇರಿ ನೀರು ಸಮುದ್ರಪಾಲು: ಮೇಕೆದಾಟುವೇ ಶಾಶ್ವತ ಪರಿಹಾರ ಎಂದ ಸಚಿವರು
ಬೆಂಗಳೂರು, ಸೆ.16: ಕಾವೇರಿ ನೀರಾವರಿ ನಿಗಮದ ಯೋಜನೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು, ನೇರವಾಗಿ ಫೀಲ್ಡಿಗಿಳಿದು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕೆಲಸ ಮಾಡದ ಅಧಿಕಾರಿಗಳನ್ನು ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮದ ಸಭಾಂಗಣದಲ್ಲಿ ಇಂದು ನಡೆದ ಕಾವೇರಿ ನೀರಾವರಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಚಾಟಿ ಬೀಸಿದರು.
ರಾಜ್ಯದ ಡ್ಯಾಂಗಳಲ್ಲಿನ ನೀರಿನ ಪ್ರಮಾಣ, ಡೆಡ್ ಸ್ಟೋರೇಜ್, ತಮಿಳುನಾಡಿಗೆ ಹರಿಸಿದ ನೀರು ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ನೀಡಬೇಕು. ಬೇಸಿಗೆ ಮುಗಿಯುವವರೆಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನಿಗಮದ ವ್ಯಾಪ್ತಿಯ 23 ಸಣ್ಣ ಅಣೆಕಟ್ಟುಗಳ ಪೈಕಿ 800 ವರ್ಷ ಹಳೆಯದಾದ ಮಂದಗೆರೆ ಹಾಗೂ ಹೇಮಗಿರಿ ಅಣೆಕಟ್ಟುಗಳು ಶಿಥಿಲವಾಗಿದ್ದು, ತಕ್ಷಣ ದುರಸ್ತಿ ಮಾಡಬೇಕು. ಹೇಮಾವತಿ ನೀರನ್ನು ಕುಣಿಗಲ್ ಮಾರ್ಗವಾಗಿ ಹುಲಿಯೂರುದುರ್ಗದವರೆಗೆ ಹರಿಸಲು ಬಾಕಿ ಇರುವ 32 ಕಿ.ಮೀ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಮೇಕೆದಾಟುವೇ ಶಾಶ್ವತ ಪರಿಹಾರ
ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಸಚಿವರು, ಕಳೆದ ಐದು ವರ್ಷಗಳಲ್ಲಿ 112.88 ಟಿಎಂಸಿ ಹೆಚ್ಚುವರಿ ಕಾವೇರಿ ನೀರು ಸಮುದ್ರ ಪಾಲಾಗಿದೆ. ಬರಗಾಲದಲ್ಲೂ ಎರಡು ರಾಜ್ಯಗಳಿಗೆ ಅನುಕೂಲವಾಗುವ ಹಾಗೂ ಕನಿಷ್ಠ 22 ಟಿಎಂಸಿ ಕುಡಿಯುವ ನೀರು ಸಂಗ್ರಹಿಸಲು ಮೇಕೆದಾಟು ಯೋಜನೆಯೊಂದೇ ಶಾಶ್ವತ ಪರಿಹಾರವಾಗಿದೆ ಎಂದರು.
ತಮಿಳುನಾಡು ಕೇಳಿದ್ದ ಪ್ರಶ್ನೆಗಳಿಗೆ ಎಸ್ಒಪಿ ಕಳುಹಿಸಿ ಗೊಂದಲ ಬಗೆಹರಿಸಲಾಗಿದೆ. ಕೇಂದ್ರ ಜಲ ಆಯೋಗವೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ರಾಜ್ಯದ ಎಲ್ಲಾ ಸಂಸದರ ಸಹಕಾರದೊಂದಿಗೆ ಪ್ರಧಾನಿಗೆ ಯೋಜನೆಯ ಲಾಭ ಮನವರಿಕೆ ಮಾಡಿಕೊಡಲಾಗುವುದು. ಮುಳುಗಡೆ ಪ್ರದೇಶಕ್ಕೆ ಪರ್ಯಾಯ ಭೂಮಿ ಸಿಕ್ಕ ತಕ್ಷಣ ಕಾಮಗಾರಿ ಆರಂಭಿಸಿ ಮೂರು ವರ್ಷದೊಳಗೆ ಪೂರ್ಣಗೊಳಿಸುವ ಗುರಿ ಇದೆ ಎಂದರು.
ಶಾಸಕರಿಗೆ ಸಮಾನ ಅನುದಾನ
ಅಭಿವೃದ್ಧಿಯಲ್ಲಿ ತಾರತಮ್ಯ ಸಲ್ಲದು, ಎಲ್ಲಾ ಶಾಸಕರಿಗೂ ರಾಜಕೀಯ ಒತ್ತಡಕ್ಕೆ ಮಣಿಯದೆ ತಲಾ ಎರಡರಿಂದ ಮೂರು ನೀರಾವರಿ ಕಾಮಗಾರಿ ನೀಡಲಾಗುವುದು ಎಂದು ಭರವಸೆ ನೀಡಿದರು. ಹಾರಂಗಿ, ಕಬಿನಿ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಹಾಗೂ ಶ್ರೀರಂಗ ಏತ ನೀರಾವರಿ ಯೋಜನೆಯ ಎಕ್ಸ್ಪ್ರೆಸ್ ಕೆನಾಲ್ ಮೂಲಕ ಶೀಘ್ರವೇ ನೀರು ಹರಿಸಲು ಸೂಚಿಸಿದರು.
ಒಟ್ಟು ನೀರಿನಲ್ಲಿ ಶೇ.20ರಷ್ಟನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸಬೇಕು. ತುಮಕೂರು, ಬಸರಾಳು, ನಾಗಮಂಗಲ ಭಾಗದ ಕೆರೆಗಳಿಗೆ ಮೂರು ದಿನಕ್ಕೊಮ್ಮೆ ನೀರು ಬಿಡಬೇಕು. ಅಗತ್ಯ ಬಿದ್ದರೆ ಪೊಲೀಸ್ ಭದ್ರತೆಯಲ್ಲಾದರೂ ಕೆರೆ-ಕಟ್ಟೆಗಳನ್ನು ತುಂಬಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ನಿಗಮದಲ್ಲಿ ಖಾಲಿ ಇರುವ ಶೇ.57ರಷ್ಟು ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದಾಗಿ ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕುಲಕರ್ಣಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಸೇರಿದಂತೆ ಹಿರಿಯ ಎಂಜಿನಿಯರ್ಗಳು ಉಪಸ್ಥಿತರಿದ್ದರು.











