ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ:                                        ಅ. 18 ರವರೆಗೆ ಅವಧಿ ವಿಸ್ತರಣೆ

ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್ 8:-

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ ಶೇಕಡ 79.19% ರಷ್ಟು ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ಹಾಗೂ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸಮೀಕ್ಷೆ ಅವಧಿ ವಿಸ್ತರಿಸಲಾಗಿದೆ. ನಿಗದಿತ ಅವಧಿಯೊಳಗೆ ಜಿಲ್ಲೆಯಲ್ಲಿ ಶೇಕಡ 100ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ 2024-25 ನೇ ಸಾಲಿಗೆ ಅಂದಾಜಿಸಿದಂತೆ ಅಂಕಿಅಂಶಗಳ ವರದಿ ಪ್ರಕಾರ ಜಿಲ್ಲೆಯಲ್ಲಿ 3,85,237 ಕಟುಂಬಗಳಿದ್ದು 12,26,357 ಜನಸಂಖ್ಯೆ ಇದೆ. ಇದುವರೆಗೆ 2,65,119 ಕುಟುಂಬಗಳ 9,03,742 ಜನರ ಸಮೀಕ್ಷೆ ನಡೆಸಲಾಗಿದ್ದು ಶೇಕಡ 79.19% ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವ ಉದ್ದೇಶವಾಗಿದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಸಮೀಕ್ಷೆಯ ದತ್ತಾಂಶ ಗೌಪ್ಯತೆ ಕಾಪಾಡಲಿದೆ. ಜೊತೆಗೆ ದತ್ತಾಂಶವು ಸೋರಿಕೆ ಆಗುವುದಿಲ್ಲ. ಸಾರ್ವಜನಿಕರು ನಿರ್ಭಿತಿಯಿಂದ ಸಮೀಕ್ಷೆಗೆ ಸಹಕರಿಸಿ ಗಣತೀದಾರರಿಗೆ ಮಾಹಿತಿ ನೀಡಿ ಎಂದರು.

ಮೀಕ್ಷೆ ಕುರಿತಂತೆ 6000 ಸ್ವಸಹಾಯ ಗುಂಪುಗಳ ಮಹಿಳೆಯರಿಂದ ಗ್ರಾಮಗಳಲ್ಲಿ ಅರಿವು ಮೂಡಿಸಲಾಗಿದೆ, ನಗರಸಭೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಚತಾ ವಾಹಿನಿಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ. ಬಾಕಿ ಉಳಿದಿರುವ ಸಾರ್ವಜನಿಕರು ಸಮೀಕ್ಷೆಯಲ್ಲಿ ಭಾಗವಹಿಸಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಿ ಎಂದರು.

ಸಹಾಯವಾಣಿ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರಲಿದ್ದಾರೆ ಗಣತಿದಾರರು
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಸಮೀಕ್ಷೆಯಲ್ಲಿ ಬಿಟ್ಟು ಹೋದ ಕುಟುಂಬಗಳು, ಭಾಗವಹಿಸದೇ ಇರುವವರು ಸಹಾಯವಾಣಿ ಸಂಪರ್ಕಿಸಿದರೆ ಗಣತಿದಾರರು ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999, ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಈ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಅಶೋಕ್ ಕುಮಾರ್ ಡಿ, ಇತರರು ಉಪಸ್ಥಿತರಿದ್ದರು.