ವಿಕಲಚೇತನರಿಗೆ ಸರ್ಕಾರಿ ಯೋಜನೆ/ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್……

ವಿಕಲಚೇತನರಿಗೆ ಸರ್ಕಾರಿ ಯೋಜನೆ/ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜನವರಿ. 28:

ಸರ್ಕಾರಿ ಕಚೇರಿಗಳಲ್ಲಿ ವಿಕಲಚೇತನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಮರ್ಪಕವಾಗಿ ತಲುಪಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ‌ಜಿಲ್ಲಾಧಿಕಾರಿ ಎ.ಬಿ. ಬಸವರಾಜು‌‌ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಇಲಾಖೆಗಳ/ಸ್ಥಳೀಯ ಸಂಸ್ಥೆಗಳ ಶೇ.5ರಷ್ಟು ಅನುದಾನ ವಿಕಲಚೇತನರ ಕಲ್ಯಾಣಕ್ಕಾಗಿ ಬಳಕೆ ಮಾಡಿದ ಬಗ್ಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಮಾಹಿತಿ ನೀಡಬೇಕು. ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರಿಗೆ ಸುಗಮವಾಗಿ ಸಂಚರಿಸಲು ರ‍್ಯಾಂಪ್ ಗಳನ್ನು ಅಳವಡಿಸಿ, ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಿ ವಿಕಲಚೇತನರಿಗೆ ಪ್ರತ್ಯೇಕವಾಗಿ ಅನುಕೂಲತೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ತಿಂಗಳ ಪ್ರತಿ 3ನೇ ಸೋಮವಾರ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್ ರವರ ನೇತೃತ್ವದ ವಿಕಲಚೇತನರ ಕುಂದು ಕೊರತೆ ಸಭೆಯನ್ನು ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು, ಕೆಲವು ವಿಕಲಚೇತನರು ಆಧಾರ್ ಕಾರ್ಡ್ ಪಡೆಯಲು ಬಯೋಮೆಟ್ರಿಮ್ ಸಮಸ್ಯೆಯಿಂದ ಸಾಧ್ಯವಾಗುತ್ತಿಲ್ಲ
ಪೋಷಣಾ ಭತ್ಯೆ ಪಡೆಯಲು ವ್ಯವಸ್ಥೆ ಕಲ್ಪಿಸುವ ಬಗ್ಗೆ ಹಾಗೂ ತೀವ್ರತರನಾದ ವಿಕಲಚೇತನರ ಮನೆ ಬಾಗಿಲಿಗೆ ಆಧಾರ ಕಾರ್ಡ್ ಸೌಲಭ್ಯವನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.

ವಿಕಲಚೇತನ ಸ್ನೇಹಿ ಶೌಚಾಲಯವನ್ನು ನಿರ್ಮಿಸಬೇಕು. ಸಾರ್ವಜನಿಕ ಸಾರಿಗೆಯಲ್ಲಿ ಬಸ್ಸುಗಳುಗಳಲ್ಲಿ ಅವರಿಗೆ ಹತ್ತಲು/ಇಳಿಯಲು ಅನುಕೂಲಕರ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ. ಭೀಮಸೇನ. ಭಾಗಡಿ ಅವರು ಮಾತನಾಡಿ, ವಿಕಲಚೇತನರಿಗೆ ಸಂಬಂಧ ನ್ಯಾಯಾಲಯದಲ್ಲಿ ದಾವೆಗಳಿದ್ದರೆ ಶೀಘ್ರವಾಗಿ ಆದ್ಯತೆಯ ಮೇರೆಗೆ ಇತ್ಯರ್ಥ ಮಾಡಲಾಗುವುದು. ವಿಕಲಚೇತನರಿಗೆ ಉಚಿತ ಕಾನೂನು ನೆರವು ನೀಡಲಾಗುವುದು, ಜೊತೆಗೆ ವಿಕಲಚೇತನರ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಹಾಗೂ ಸಮಸ್ಯೆಗಳನ್ನು ಪರಿಹರಿಸಲು ಕಾನೂನು ಸೇವೆಗಳ ಪ್ರಾಧಿಕಾರ ಸದಾ ಕಾರ್ಯಪ್ರವೃತ್ತವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಮುದ್ದಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.