ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ
ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2026ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಮಾಜಿ ಶಾಸಕರು ಹಾಗೂ ಲೇಖಕರೂ ಆದ ವೈ.ಎಸ್.ವಿ ದತ್ತ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ನಾಡು ಕಂಡ ಓರ್ವ ಧೀರೋದಾತ್ತ ರಾಜಕಾರಣಿ ಶಾಂತವೇರಿ ಗೋಪಾಲಗೌಡರು ಇವರ ಹೆಸರಿನಲ್ಲಿ ಕನ್ನಡ ಜನಶಕ್ತಿ ಕೇಂದ್ರವು ಪ್ರಶಸ್ತಿಯೊಂದನ್ನು ಸ್ಥಾಪಿಸಿ ಪ್ರತಿ ವರ್ಷ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸಿರುವ ನಾಡಿನ ಗಣ್ಯರೊಬ್ಬರನ್ನು ಗುರುತಿಸಿ ಕಳೆದ 28 ವರ್ಷಗಳಿಂದ ನೀಡಲಾಗುತ್ತಿದೆ.
ಈ ಪ್ರಶಸ್ತಿಯು 25 ಸಾವಿರ ನಗದು, ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ
ಬಡವರ, ರೈತರ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯರಾಗಿರುವ ವೈ.ಎಸ್.ವಿ ದತ್ತ ರವರು
2006 ರಿಂದ 2012 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 2012ರಲ್ಲಿ ಕಡೂರು ಕ್ಷೇತ್ರದ ಶಾಸಕರಾಗಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ, ಪಕ್ಷದ ಅಧಿಕೃತ ವಕ್ತಾರರಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಜಾತ್ಯಾತೀತ ಜನತಾದಳ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಾರ್ಚ್ 14 ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.