ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ

ವಿಜಯ ದರ್ಪಣ ನ್ಯೂಸ್….

ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ

ಶಿಡ್ಲಘಟ್ಟ : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.
ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.
ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು ,ವಿಶೇಷ ಹೂವಿನ ಅಲಂಕಾರ ಮಾಡಿದ್ದ ಬ್ರಹ್ಮರಥೋತ್ಸವದ ತೇರನ್ನು ದೇವಸ್ಥಾನದ ಸುತ್ತಲೂ ಎಳೆದ ಭಕ್ತರು ಬಾಳೆಹಣ್ಣು, ದವನವನ್ನು ತೇರಿನ ಕಳಶಕ್ಕೆ ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಭಗವಂತನನ್ನು ಕೋರಿಕೊಂಡರು.

ರಥೋತ್ಸವಕ್ಕೆ ಶಾಸಕರಾದ ಬಿ.ಎನ್.ರವಿಕುಮಾರ್ ಹಾಗು ತಹಶೀಲ್ದಾರ್ ಗಗನಸಿಂಧು ಅವರುಗಳು ಚಾಲನೆ ನೀಡಿದರು.
ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು,ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು.

ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು,ವಿವಿಧ ಗ್ರಾಮಸ್ಥರು ಹೆಸರುಬೇಳೆ ಪಾನಕ ವಿತರಿಸಿದರು.

ಸುತ್ತಮುತ್ತಲಿನ ಗ್ರಾಮಗಳು ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು,ಬ್ರಹ್ಮರಥೋತ್ಸವ ಸಮಯಕ್ಕೆ ಸರಿಯಾಗಿ ಗರುಡ ಪಕ್ಷಿ ಕಾಣಿಸಿಕೊಂಡು, ರಥದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಮರೆಯಾಯಿತು.

ರಥೋತ್ಸವದಲ್ಲಿ ಶಾಸಕ ಬಿ.ಎನ್.ರವಿಕುಮಾರ್, ತಹಶಿಲ್ದಾರ್ ಗಗನಸಿಂಧು, ಬ್ಯಾಟರಾಯಸ್ವಾಮಿ ಸೇವಾಸಮಿತಿಯ ಬ್ಯಾಟರಾಯಶೆಟ್ಟಿ ,ಎಬಿಡಿ ಟ್ರಸ್ಟ್ ಅದ್ಯಕ್ಷ ರಾಜೀವ್‌ಗೌಡ ,ಬ್ಲಾಕ್ ಕಾಂಗ್ರೆಸ್ ಅದ್ಯಕ್ಷೆ ಸಹನಾರಾಜೀವ್ ಗೌಡ ,ಕಾಂಗ್ರೆಸ್ ಮುಖಂಡ ಆಂಜಿನಪ್ಪ (ಪುಟ್ಟು) , ಬಿಜೆಪಿ ಗ್ರಾಮಾಂತರ ಮಂಡಲ ಅದ್ಯಕ್ಷ ಸೀಕಲ್ ಆನಂದಗೌಡ ,ಬಸವಾಪಟ್ಟಣ ಭೈರೇಗೌಡ,ಮುತ್ತೂರು ವೆಂಕಟೇಶ್,ಎಂ.ರಾಮಂಜಿ ಮುಂತಾದವರು ಪಾಲ್ಗೊಂಡಿದ್ದರು.