ವಿಜಯ ದರ್ಪಣ ನ್ಯೂಸ್…..
ಜಲ ಮೂಲಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ

ಶಿಡ್ಲಘಟ್ಟ : ಜಲ ಮೂಲಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಮಳೆಗಾಲವು
ಜೂನ್ ನಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಜಿಲ್ಲೆಯ ಜಲಮೂಲಗಳನ್ನು ಸಿದ್ಧತೆ ಮಾಡುವುದರ ಮೂಲಕ, ನೀರು ಶೇಖರಣೆ ಮಾಡಿ ಇಂಗುವಂತೆ ಮಾಡಬೇಕು ಎಂದು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ತಿಳಿಸಿದರು.
ತಾಲ್ಲೂಕು ಪಂಚಾಯತಿ,ತಾಲ್ಲೂಕು ಆರೋಗ್ಯ ಇಲಾಖೆ, ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಸಾದಿಲಮ್ಮ ಕಲ್ಯಾಣಿ ಸ್ವಚ್ಛತಾ ಆಂದೋಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭುವಿಯಲ್ಲಿ ವಾಸಿಸುವ ಸಕಲ ಜೀವಿಗಳಿಗೆ ನೀರು ಅವಶ್ಯಕ ಹಿರಿಯರು ಉಳಿಸಿರುವ ಜಲ ಮೂಲಗಳನ್ನು ಸಂರಕ್ಷಿಸಿ ಭವಿಷ್ಯದ ಪೀಳಿಗೆಗೆ ಉಳಿಸಲು ಸಾರ್ವಜನಿಕರು ಸಂಕಲ್ಪ ಮಾಡಬೇಕಿದೆ ಎಂದು ಹೇಳಿದರು.

ಸ್ವಚ್ಛತಾ ಅಭಿಯಾನವನ್ನು ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಕಲ್ಯಾಣಿ ನೈರ್ಮಲ್ಯಕರಣ ಮಾಡಲು
ಯೋಜನೆ ರೂಪಿಸಲಾಗಿದೆ,ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ನಿಷೇಧದಿಂದ ಪ್ಲಾಸ್ಟಿಕ್ ಮುಕ್ತ ಗ್ರಾಮ, ತಾಲ್ಲೂಕು, ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು. ಗ್ರಾಮ ಪಂಚಾಯತಿ ವತಿಯಿಂದ ಅರಿವು ಮೂಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಸೆಯದೆ ಸಂಗ್ರಹಣೆ ಮಾಡಿ ಸ್ವಚ್ಛತಾ ವಾಹನಗಳಿಗೆ ಹಾಕಬೇಕು ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಯೋಜನಾಧಿಕಾರಿ ಅನಿಲ್ ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ವೈದ್ಯರಾದ ಡಾ.ಯಶವಂತ್, ಪಿಡಿಒ ವಜ್ರೇಶ್ ಮುಂತಾದವರು ಪಾಲ್ಗೊಂಡಿದ್ದರು.








