ವಿಜಯ ದರ್ಪಣ ನ್ಯೂಸ್….
ಕುಡಿಯುವ ನೀರು,ರಾಸುಗಳ ಮೇವಿನ ಸಮಸ್ಯೆ ಪರಿಹರಿಸಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ನಿರ್ಮಲಾ ಸೂಚನೆ

ಶಿಡ್ಲಘಟ್ಟ : ಬೇಸಿಗೆಯ ಬಿಸಿಲ ದಿನಗಳು ಪ್ರಾರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸ್ಥಳೀಯ ಸಂಸ್ಥೆಗಳು, ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಂಗಮಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಾಸುಗಳಿಗೆ ಮೇವಿನ ಲಭ್ಯತೆ ಹಾಗೂ ಕೃಷಿ ಚಟುವಟಿಕೆಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕೇವಲ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಎದುರಾಗುವುದಿಲ್ಲ ಬದಲಿಗೆ ರಾಸುಗಳಿಗೆ ಮೇವಿನ ಕೊರತೆಯೂ ಎದುರಾಗಬಹುದು ಆದ್ದರಿಂದ ಬೇರೆ ಬೇರೆ ರೂಪದ ನಾನಾ ಸಮಸ್ಯೆಗಳು ಎದುರಾಗಲಿವೆ ಎಂದು ಹೇಳಿದರು.
ಸಂಬಂಧಿಸಿದ ನೋಡಲ್ ಅಧಿಕಾರಿಗಳು ಕುಡಿಯುವ ನೀರು ಹಾಗೂ ರಾಸುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತೆಯ ಕ್ರಮ ವಹಿಸಬೇಕು ಜತೆಗೆ ಕೃಷಿ ಚಟುವಟಿಕೆಗಳನ್ನು ಕೂಡ ಗಮನಿಸಬೇಕು ,ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಸಮಸ್ಯೆಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಹೇಳಿದರು.
ಎಲ್ಲೋ ಕುಳಿತು ಕಾಟಾಚಾರಕ್ಕೆ ವರದಿ ನೀಡುವುದರಿಂದ ಸಮಸ್ಯೆ ಇನ್ನಷ್ಟು ಬಿಗಡಾಯಿಸುತ್ತದೆ ಹಾಗಾಗಿ ಸ್ಥಳ ಭೇಟಿ ಪರಿಶೀಲನೆಯಿಂದ ಮಾತ್ರ ಸಮಸ್ಯೆಯ ವಾಸ್ತವ ಸ್ಥಿತಿ ತಿಳಿಯಲಿದೆಯಲ್ಲದೆ ಅದರ ಪರಿಹಾರವೂ ಸಾಧ್ಯವಾಗಲಿದೆ, ಕಾಲ ಕಾಲಕ್ಕೆ ಸಮಸ್ಯೆಯ ವರದಿ ಹಾಗು
ಅದರ ಪರಿಹಾರಕ್ಕೆ ಕೈಗೊಂಡ ಕ್ರಮಗಳ ವರದಿಯನ್ನು
ನೀಡುವಂತೆ ತಾಕೀತು ಮಾಡಿದರು.
ಜಂಗಮಕೋಟೆ ಹೋಬಳಿಗೆ ನೇಮಕ ಮಾಡಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ನೋಡಲ್ ಅಧಿಕಾರಿಗಳು ಸಂಬಂಧಿಸಿದ ಹೋಬಳಿಗೆ ವಾರಕ್ಕೆ ಕನಿಷ್ಠ ಒಂದು ದಿನ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು ,ತಾವು ಭೇಟಿ ನೀಡಿದ ಪರಿಶೀಲನಾ ಅವಧಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ತಾಲ್ಲೂಕಿನ ಟಾಸ್ಕ್ಫೋರ್ಸ್ ಸಮಿತಿಗೆ ಮಾಹಿತಿ ನೀಡಿ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.
ಕೊಳವೆ ಬಾವಿಗಳು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು ದುರಸ್ತಿಯಾಗಿದ್ದರೆ ಅದರ ರಿಪೇರಿ ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲನೆ ಮಾಡಿ ಕುಡಿಯುವ ನೀರು ಶುದ್ದವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ರಾಸುಗಳ ಮೇವಿನ ಸ್ಥಿತಿಗತಿಯ ಬಗ್ಗೆ ಪರಿಶೀಲಿಸಿ ಮೇವಿನ ಕೊರತೆ ಕಂಡುಬಂದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸಿ ಅವರ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಜಂಗಮಕೋಟೆ ಹೋಬಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜಂಗಮಕೋಟೆ ಹೋಬಳಿಯ ನೋಡಲ್ ಅಧಿಕಾರಿಗಳು ಹಾಗು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.










