ವಿಜಯ ದರ್ಪಣ ನ್ಯೂಸ್….
ತಲಕಾಯಲಬೆಟ್ಟದಲ್ಲಿ ಗ್ರಾಮೀಣ ಕೌಶಲ್ಯ ಕಲಿಕಾ ಶಿಬಿರ

ಶಿಡ್ಲಘಟ್ಟ : ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಸಂಘಟನಾ ಕೌಶಲ್ಯವನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ
ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಪ್ಪ ತಿಳಿಸಿದರು.
ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ, ಸಮಾಜಕಾರ್ಯ ವಿಭಾಗದ ವತಿಯಿಂದ 7 ದಿನಗಳ ಗ್ರಾಮೀಣ ಕಲಿಕಾ ಶಿಬಿರದಲ್ಲಿ ಬಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತ್ತು ಸ್ವಯಂಸೇವಾ ಸಂಸ್ಥೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಅಧ್ಯಯನ ಮಾಡಲಿದ್ದು ಗ್ರಾಮಸ್ಥರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ವಿದ್ಯಾರ್ಥಿಗಳು ಗ್ರಾಮ ಪಂಚಾಯತಿಯ ಹಳ್ಳಿಗಳಲ್ಲಿ 7 ದಿನಗಳ ಕಾಲ ಉಳಿಯಲಿದ್ದು, ಪ್ರಸ್ತುತ ಹಳ್ಳಿಗಳ ಜನರ ಜೀವನಶೈಲಿ, ಸಮಸ್ಯೆಗಳು ಮತ್ತು ಸಂಸ್ಕೃತಿಯನ್ನು ಪ್ರತ್ಯಕ್ಷವಾಗಿ ಕಂಡು, ನೈರ್ಮಲ್ಯ ಜಾಗೃತಿ, ಆರೋಗ್ಯ ತಪಾಸಣಾ ಶಿಬಿರಗಳು, ಮಕ್ಕಳ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ ಎಂದರು.
ಇದೇ ವೇಳೆ ಬೇರು-ಬೇವರು ಕಲಾ ತಂಡದವರು ಹಾಡಿನ ಮೂಲಕ ಗ್ರಾಮೀಣ ಬದುಕನ್ನು ತೆರೆದಿಟ್ಟರು ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾಜಿ ಗ್ರಾ. ಪಂ. ಸದಸ್ಯ ಅಶ್ವತ್ಥರೆಡ್ಡಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ, ಸಮಾಜಕಾರ್ಯ ವಿಭಾಗದ ಸಂಯೋಜಕ ಬಸವಲಿಂಗಪ್ಪ, ನರಸಿಂಹಪ್ಪ, ಅಮೃತಾ, ಗ್ರಾಮ ಪಂಚಾಯಿತಿ ಕರವಸೂಲಿಗಾರ ಈಶ್ವರರೆಡ್ಡಿ, ಬೇರು-ಬೇವರು ಕಲಾ ತಂಡದವರು, ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗು ಸಾರ್ವಜನಿಕರು ಪಾಲ್ಗೊಂಡಿದ್ದರು.








