ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆ : ಪಾಳುಬಾವಿಗೆ ಬಿದ್ದಿದ್ದ ಜಿಂಕೆ ರಕ್ಷಣೆ
ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮದಲ್ಲಿ ಸುಮಾರು 40 ಅಡಿ ಆಳದ ಪಾಳುಬಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದ ಜಿಂಕೆಯನ್ನು ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ತುಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಪಾಳುಬಿದ್ದ ಬಾವಿಯಲ್ಲಿ ಜಿಂಕೆ ಬಿದ್ದಿರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ , ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಹಗ್ಗಗಳ ಸಹಾಯದಿಂದ ಬಾವಿಯೊಳಗೆ ಇಳಿದು ಸುಮಾರು 40 ಅಡಿ ಆಳದಲ್ಲಿದ್ದ ಜಿಂಕೆ ಭಯಭೀತಗೊಂಡಿದ್ದರೂ ಸಿಬ್ಬಂದಿ ಅತ್ಯಂತ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ, ಹಗ್ಗಗಳ ಮೂಲಕ ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು.
ರಕ್ಷಣಾ ಕಾರ್ಯಾಚರಣೆಯ ವೇಳೆ ಜಿಂಕೆಗೆ ಯಾವುದೇ ಗಂಭೀರ ಗಾಯಗಳಾಗದಂತೆ ಸಿಬ್ಬಂದಿ ವಿಶೇಷ ಕಾಳಜಿ ವಹಿಸಿದರು, ಮೇಲಕ್ಕೆತ್ತಿದ ನಂತರ ಜಿಂಕೆಯ ಆರೋಗ್ಯವನ್ನು ಪರಿಶೀಲಿಸಿ, ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಯ ವಶಕ್ಕೆ ಒಪ್ಪಿಸಲಾಯಿತು ,ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ. ಲೋಕೇಶ್, ಸಿಬ್ಬಂದಿಗಳಾದ ಅಶೋಕ ಜಿ.ರತ್ನಭೂಷಣ ಮುಖರೆ,ಕೆ.ರಕ್ಷಿತ್, ಶ್ರೀನಿವಾಸ ಮುಂತಾದವರು ಹಾಜರಿದ್ದರು.