ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ವಿಜಯ ದರ್ಪಣ ನ್ಯೂ ಸ್,  ಹೊಸಕೋಟೆ        ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ “ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ, ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸುತ್ತಾ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಸರ್ಕಾರ ನಿರ್ಮಿಸಿದೆ. ಒಂದು ಶಾಲೆಯಲ್ಲಿ ಆಹಾರ, ಬಟ್ಟೆ, ವಸತಿ ಮೂಲಭೂತ ಸೌಕರ್ಯಗಳನ್ನು ಉಚಿತವಾಗಿ ಕಲ್ಪಿಸುವುದು ಅಂದರೆ ಅದು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಎಂದರು. ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.


ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲೆ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.