ವಿಜಯ ದರ್ಪಣ ನ್ಯೂಸ್….
ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆ

ತಾಲೂಕಿನಲ್ಲೇ ಅತಿ ವೇಗವಾಗಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಪಂಚಾಯಿತಿ ತಾವರೆಕೆರೆ : ಮುನಿಗಂಗಯ್ಯ
ತಾವರೆಕೆರೆ: ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮತಗಟ್ಟೆಗಳ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ, ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ.
ತಾವರೆಕೆರೆ ಗ್ರಾಮದಲ್ಲಿ ಮಾತ್ರ ಕೆಲವೇ ಅರ್ಜಿಗಳ ಪರಿಶೀಲನೆ ಮತ್ತು ದಾಖಲಾತಿ ಪ್ರಕ್ರಿಯೆ ಬಾಕಿ ಇದ್ದು, ಅದನ್ನೂ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ತಾಲೂಕಿನಲ್ಲಿಯೇ ಅತಿ ವೇಗವಾಗಿ ಎಸ್ಐಆರ್ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗ್ರಾಮ ಪಂಚಾಯಿತಿಗಳಲ್ಲಿ ತಾವರೆಕೆರೆ ಗ್ರಾಮ ಪಂಚಾಯಿತಿ ಮುಂಚೂಣಿಯಲ್ಲಿದ್ದು, ಈ ಸಾಧನೆಗೆ ಬಿಎಲ್ಒಗಳು, ಗ್ರಾಮ ಆಡಳಿತ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರವೇ ಕಾರಣವಾಗಿದೆ ಎಂದು ಅವರು ಹೇಳಿದರು.
ಮತದಾರರ ಪಟ್ಟಿಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈ ತಪ್ಪದಂತೆ ಮತ್ತು ಅನರ್ಹರ ಹೆಸರು ಉಳಿಯದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂದಗುಡಿ ಹೋಬಳಿಯ ಉಪ ತಹಶೀಲ್ದಾರ್ ಚೈತ್ರ ಮಾತನಾಡಿ, ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯೆಯ ಅತ್ಯಂತ ಪ್ರಮುಖ ದಾಖಲೆ. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಹಾಗೂ ತಪ್ಪುಗಳನ್ನು ತಿದ್ದುಪಡಿ ಮಾಡುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ.
ಸರ್ಕಾರದ ನಿರ್ದೇಶನದಂತೆ ಎಸ್ಐಆರ್ ಕಾರ್ಯವನ್ನು ಪಾರದರ್ಶಕವಾಗಿ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಗ್ರಾಮ ಆಡಳಿತ ಅಧಿಕಾರಿ ಶ್ಯಾಮಸುಂದರ್ ಮಾತನಾಡಿ, ಮತದಾರರ ಪಟ್ಟಿಯ ನಿಖರತೆಗಾಗಿ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಸದಾಗಿ 18 ವರ್ಷ ಪೂರೈಸಿರುವ ಯುವ ಮತದಾರರ ಹೆಸರುಗಳನ್ನು ಸೇರ್ಪಡೆಗೊಳಿಸುವುದು, ಸ್ಥಳಾಂತರಗೊಂಡವರ ವಿವರಗಳನ್ನು ನವೀಕರಿಸುವುದು ಹಾಗೂ ಮೃತರ ಹೆಸರನ್ನು ನಿಯಮಾನುಸಾರ ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನೀಡಿ ಅಧಿಕಾರಿಗಳಿಗೆ ಸಹಕರಿಸಿದರೆ ಪರಿಷ್ಕರಣೆ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು), ಪಂಚಾಯಿತಿ ಸಿಬ್ಬಂದಿ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಬಾಕಿ ಉಳಿದಿರುವ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸುವ ಕುರಿತು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಸತ್ಯನಾರಾಯಣ್, ರಾಕೇಶ್, ಮಾಜಿ ಅಧ್ಯಕ್ಷರಾದ ರವಿಕುಮಾರ್, ಗಂಗಾಪುರ ಮಂಜುನಾಥ್, ರಮೇಶ್, ಸುಧಾಕರ್, ಶಿಕ್ಷಕರಾದ ಪ್ರವೀಣ್, ಲೋಕೇಶ್ ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.








