ವಿಜಯ ದರ್ಪಣ ನ್ಯೂಸ್….
ಮಧ್ಯವರ್ತಿಗಳ ಹಸ್ತಕ್ಷೇಪ ಇಲ್ಲದೆ ನೈಜ ರೈತರಿಗೆ ತಲುಪಿಸಿ : ಅಧಿಕಾರಿಗಳಿಗೆ ಶಾಸಕ ರವಿಕುಮಾರ್ ಸೂಚನೆ

ಶಿಡ್ಲಘಟ್ಟ : ಸರ್ಕಾರದ ಎಲ್ಲಾ ಯೋಜನೆಗಳು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಪಾರದರ್ಶಕವಾಗಿ ನೈಜ ರೈತರಿಗೆ ತಲುಪಬೇಕು ಎಂದು ಅಧಿಕಾರಿಗಳಿಗೆ ಶಾಸಕ ಬಿ.ಎನ್. ರವಿಕುಮಾರ್ ಸೂಚಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ರೇಷ್ಮೆ ಇಲಾಖೆ ಹಮ್ಮಿಕೊಂಡಿದ್ದ ರೇಷ್ಮೆ ಹುಳು ಸಾಕಾಣಿಕೆ ಫಲಾನುಭವಿಗಳಿಗೆ ಸಲಕರಣೆ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೇಷ್ಮೆ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳ ವಿವಿಧ ಯೋಜನೆಗಳ ಮಾಹಿತಿ ಪ್ರತಿಯೊಬ್ಬ ರೈತನಿಗೂ ತಲುಪುವಂತೆ ಅಧಿಕಾರಿಗಳು ಕರಪತ್ರಗಳನ್ನು ಮುದ್ರಿಸಿ ಹಂಚಿಕೆ ಮಾಡಬೇಕು ಎಂದು ಹೇಳಿದರು.
ತಾಲ್ಲೂಕಿನ 279 ಅರ್ಹ ರೇಷ್ಮೆಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಯೋಜನೆಯಡಿ 49.50 ಲಕ್ಷ ರೂ.ಗಳ ವೆಚ್ಚದಲ್ಲಿ ಒಟ್ಟು 430 ಘಟಕಗಳ ರೇಷ್ಮೆ ಸಾಕಾಣಿಕೆ ಸಲಕರಣೆಗಳನ್ನು ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಸರ್ಕಾರದ ನಿಯಮಾವಳಿಯಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ 90ರಷ್ಟು ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ 75ರಷ್ಟು ಸಬ್ಸಿಡಿ ದರದಲ್ಲಿ ಸಲಕರಣೆಗಳನ್ನು ಒದಗಿಸಲಾಗುತ್ತಿದೆ ಎಂದರು.
ಕ್ಷೇತ್ರದಾದ್ಯಂತ ರೇಷ್ಮೆ ಬೆಳೆಗಾರರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ 2026-27ನೇ ಸಾಲಿನಲ್ಲಿ ಹೆಚ್ಚಿನ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ವೇಳೆ ಕ್ರಿಮಿನಾಶಕ ಸ್ಪೇಯರ್ಗಳು ,ಶೇಡ್ ನೆಟ್ಗಳು
ಚಂದ್ರಿಕೆಗಳು ,ಸೋಲಾರ್ ದೀಪಗಳು ಸಲಕರಣೆಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ರೇಷ್ಮೆ ಉಪ ನಿರ್ದೇಶಕ ಮಾರಪ್ಪರ ಬೀರಲದಿನ್ನಿ, ರೇಷ್ಮೆ ಸಹಾಯಕ ನಿರ್ದೇಶಕ ಅಕ್ಕಲ್ ಪಾಷಾ, ರೇಷ್ಮೆ ವಿಸ್ತರಣಾಧಿಕಾರಿಗಳಾದ ಜಗದೇವಪ್ಪ ಗುಗ್ಗರಿ,
ಹರೀಶ್ ಗೌಡ, ಎಂ.ಸಿ. ಭಾರತಿ, ರೇಷ್ಮೆ ನಿರೀಕ್ಷಕರಾದ ಸೋಮಣ್ಣ ಮಕಣಾಪುರ, ಮಂಜುನಾಥ ಜಗತಾಪ್, ಮುಖಂಡರಾದ ಮೇಲೂರು ಮಂಜುನಾಥ್, ತಾದೂರು ರಘು,ಭಕ್ತರಹಳ್ಳಿ ಮಂಜುನಾಥ್,ಹೆಚ್. ವಿಜಯಕುಮಾರ್, ಸೊಣ್ಣೆನಹಳ್ಳಿ ಮೂರ್ತಿ,ಪ್ರದೀಪ್, ನಂದಕಿಶನ್, ರೈತ ಮುಖಂಡ ಮುನಿಕೆಂಪಣ್ಣ ,ಜಯಂತಿ ಗ್ರಾಮ ನಾರಾಯಣಸ್ವಾಮಿ ಮುಂತಾದವರು ಹಾಜರಿದ್ದರು.











