ವಿಜಯ ದರ್ಪಣ ನ್ಯೂಸ್….
ಭೀಮನ ಅಮಾವಾಸ್ಯೆ ಪ್ರಯುಕ್ತಯ ಮೊದಲನೇ ದಿನದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ

ತಾವರೆಕೆರೆ : ಭೀಮನ ಅಮಾವಾಸ್ಯೆ ಅಂಗವಾಗಿ ಮೂರು ದಿನಗಳ ಕಾಲ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳಿಗೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾಳಪ್ಪನಹಳ್ಳಿ ಗ್ರಾಮದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ಸೋಮವಾರ ವಿಧಿವತ್ತಾಗಿ ಚಾಲನೆ ದೊರೆಯಿತು.
ಪೂಜಾ ಕಾರ್ಯಕ್ರಮದ ಮೊದಲನೇ ದಿನವಾದ ಸೋಮವಾರ ಕಾರ್ಯಸಿದ್ಧಿ ಮಹಾಗಣಪತಿ ಹೋಮ ಹಾಗೂ ಮಹಾ ರುದ್ರ ಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ವೇದಮಂತ್ರಗಳ ಘೋಷ, ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಹೋಮ-ಹವನಗಳ ಮೂಲಕ ಕ್ಷೇತ್ರದಲ್ಲಿ ಧಾರ್ಮಿಕ ವಾತಾವರಣ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ಭದ್ರಕಾಳಿ ಶಕ್ತಿ ಪೀಠದ ಪೀಠಾಧಿಪತಿಗಳಾದ ನಾಗರಾಜ್ ಶಾಸ್ತ್ರಿಗಳು ಮಾತನಾಡಿ, ಭೀಮನ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು, ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದರು.
ಭೀಮನ ಅಮಾವಾಸ್ಯೆಯ ಪ್ರಮುಖ ದಿನದಂದು ಕ್ಷೇತ್ರಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸಾವಿರಾರು ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆಯನ್ನು ಮಾಡಲಾಗುವುದು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಾಗರಾಜ್ ಶಾಸ್ತ್ರಿಗಳು ತಿಳಿಸಿದರು.
ಮೂರು ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆಯುವಂತೆ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಆಯೋಜಕರು ಮನವಿ ಮಾಡಿದ್ದಾರೆ.ಭಕ್ತರ ಅನುಕೂಲಕ್ಕಾಗಿ ಪೂಜಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು, ಭೀಮನ ಅಮಾವಾಸ್ಯೆಯ ದಿನದಂದು ಕ್ಷೇತ್ರದಲ್ಲಿ ಭಕ್ತರ ಸಂಚಾರ ಹೆಚ್ಚಾಗುವ ನಿರೀಕ್ಷೆಯಿದೆ.









