ವಿಜಯ ದರ್ಪಣ ನ್ಯೂಸ್……
ಹೊಸಕೋಟೆ ತಾಲೂಕು ಕುರುಬರ ಸಂಘದ ನೂತನ ಅಧ್ಯಕ್ಷರಾಗಿ ಸಿ. ನಾಗರಾಜ್ ಅವಿರೋಧ ಆಯ್ಕೆ

ತಾವರೆಕೆರೆ : ಹೊಸಕೋಟೆ ತಾಲೂಕು ಕುರುಬರ ಸಂಘದ ನೂತನ ಅಧ್ಯಕ್ಷರಾಗಿ ಚನ್ನಸಂದ್ರ ಸಿ. ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾದರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತಾವರೆಕೆರೆ ಶ್ರೀಕಾಂತ್ ಖಜಾನ್ಸಿಯಾಗಿ ಚಿಮಾಂಡಹಳ್ಳಿ ರಾಜೇಂದ್ರ ಹಾಗೂ ಸಹಾಯಕ ಕಾರ್ಯದರ್ಶಿಯಾಗಿ ಹೊಸಕೋಟೆ ಗ್ಯಾಸ್ ಮಂಜುನಾಥ್ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಚನ್ನಸಂದ್ರ ಸಿ. ನಾಗರಾಜ್ ಅವರು, ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಅಣ್ಣನವರ ಆಶೀರ್ವಾದ ಹಾಗೂ ತಾಲೂಕಿನ ಕುರುಬ ಸಮುದಾಯದ ಜನರ ಬೆಂಬಲ ಮತ್ತು ಆಶೀರ್ವಾದದಿಂದ ತಮ್ಮನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ತಾಲೂಕಿನ ಕುರುಬ ಸಮುದಾಯದ ಸಂಘಟನೆ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತಾಗಲು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಯೋಜನೆಗಳನ್ನು ರೂಪಿಸಲಾಗುವುದು. ಮುಂದಿನ ದಿನಗಳಲ್ಲಿ ಶಾಲೆ, ಕಾಲೇಜು ಹಾಗೂ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬರಬೇಕು, ಯುವಕರು ಉದ್ಯೋಗ ಮತ್ತು ಸ್ವಾವಲಂಬನೆಯತ್ತ ಸಾಗಬೇಕು ಎಂಬ ಉದ್ದೇಶದಿಂದ ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸಮಾಜದ ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.
ತಮ್ಮ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ತಾಲೂಕಿನ ಕುರುಬ ಸಮುದಾಯದ ಮುಖಂಡರು, ಹಿರಿಯರು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಸಮುದಾಯದ ಏಳಿಗೆಯೇ ತಮ್ಮ ಪ್ರಮುಖ ಗುರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ನೂತನ ಪದಾಧಿಕಾರಿಗಳು, ಮುಖಂಡರು ಹಾಗೂ ಕುರುಬ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದು, ಚನ್ನಸಂದ್ರ ಸಿ. ನಾಗರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದರು.










