ವಿಜಯ ದರ್ಪಣ ನ್ಯೂಸ್….
ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ತಾವರೆಕೆರೆ : ಹೊಸಕೋಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹೊಸಕೋಟೆ ತಾಲೂಕು ಆಡಳಿತದ ವತಿಯಿಂದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸಕೋಟೆ ತಾಲೂಕು ದಂಡಾಧಿಕಾರಿ ಶೀತಲ್ ಅವರು ವಹಿಸಿ ಹಾಗೂ ಕಾರ್ಯಕ್ರಮವನ್ನು ಉದ್ಘಾಟಿಸಿ
ಮಾತನಾಡಿದರು ದೇವರಾಜ ಅರಸು ಅವರು ರಾಜ್ಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ನಾಯಕರಾಗಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಆಶಯದೊಂದಿಗೆ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಆಡಳಿತ ಮತ್ತು ಸಾಮಾಜಿಕ ಸುಧಾರಣೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಿದ ಅವರು, ಎಸ್ಎಸ್ಎಲ್ಸಿ ಹಂತವು ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಪ್ರಮುಖ ಅಡಿಪಾಯವಾಗಿದ್ದು, ಉತ್ತಮ ಅಂಕ ಗಳಿಸಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿಯೂ ಪರಿಶ್ರಮ, ಶಿಸ್ತು ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಸರ್ಕಾರದಿಂದ ದೊರೆಯುವ ವಿದ್ಯಾರ್ಥಿವೇತನ, ವಸತಿ, ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅರ್ಹ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣದತ್ತ ಸಾಗಬೇಕು ಎಂದರು.

ಹಿಂದುಳಿದ ವರ್ಗಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಿ. ಮುನಿಯಪ್ಪ ಮಾತನಾಡಿ, ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಹೊಸ ದಿಕ್ಕು ತೋರಿಸಿದ ಮಹಾನ್ ನಾಯಕರಾಗಿದ್ದಾರೆ. ಹಿಂದುಳಿದ ವರ್ಗಗಳ ಜನರು ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬುದು ಅವರ ಪ್ರಮುಖ ಆಶಯವಾಗಿತ್ತು. ಇಂದು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರತಿಭಾ ಪುರಸ್ಕಾರವು ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದಷ್ಟೇ ಅಲ್ಲದೆ, ಉತ್ತಮ ಸಂಸ್ಕಾರ, ಶಿಸ್ತು, ಮಾನವೀಯ ಮೌಲ್ಯಗಳು ಹಾಗೂ ಸಮಾಜದ ಬಗ್ಗೆ ಜವಾಬ್ದಾರಿಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಿ. ಮುನಿಯಪ್ಪ ಕರೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಿದ್ದರಾಜು ಮಾತನಾಡಿ, ಸರ್ಕಾರವು ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ತಮ್ಮ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪೌರಾಯುಕ್ತ ನೀಲಾಲೋಚನೆ ಪ್ರಭು, ಹಿಂದುಳಿದ ವರ್ಗದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ರಾಜಗೋಪಾಲ್, ಸಮಾಜ ಕಲ್ಯಾಣ ಇಲಾಖೆಯ ಸಿದ್ದರಾಜು, ಪಶು ಸಂಗೋಪನೆ ಇಲಾಖೆಯ ಮಂಜುನಾಥ್, ಮೀನುಗಾರಿಕೆ ಇಲಾಖೆಯ ಅಧಿಕಾರಿ ಸುಬ್ರಮಣಿ, ಪಿ ಕೆ ಎಸ್ ಶ್ರೀನಿವಾಸ್, ಗ್ಯಾರಂಟಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ, ಮುತ್ಸಂದ್ರ ಆನಂದ್, ಲಕ್ಕುಂಡಳ್ಳಿ ಮಂಜುನಾಥ್ , ಶ್ರೀಧರ್, ಮಂಚಪ್ಪನಹಳ್ಳಿ ಮಂಜುನಾಥ್ ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.









