ವಿಜಯ ದರ್ಪಣ ನ್ಯೂಸ್….
ನಂದಗುಡಿ ಗ್ರಾಮ ಪಂಚಾಯಿತಿಯಲ್ಲಿ ‘ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್’ ಜಾಬ್ ಕಾರ್ಡ್ ಮೇಳ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ)’ ಯೋಜನೆಯಡಿ ಇಂದು ‘ಉದ್ಯೋಗ ಚೀಟಿ (ಜಾಬ್ ಕಾರ್ಡ್) ಮೇಳ’ವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಅಭಿಯಾನದ ಅಂಗವಾಗಿ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಹೊಸದಾಗಿ ಉದ್ಯೋಗ ಚೀಟಿ ಪಡೆಯುವುದು ಹಾಗೂ ಈಗಾಗಲೇ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಕುರಿತು ಜಾಗೃತಿ ಮೂಡಿಸಿದರು. ತದನಂತರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಭೆ ನಡೆಸಿ, ಯೋಜನೆಯ ಮಹತ್ವ ಹಾಗೂ ಲಭ್ಯವಿರುವ ವೈಯಕ್ತಿಕ ಕಾಮಗಾರಿಗಳ ಕುರಿತು ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆಂಪಣ್ಣ ಮಾತನಾಡಿ, “ದಿನಾಂಕ 15-08-2026 ರಿಂದ 15-09-2026 ರವರೆಗೆ ‘ಮನೆ ಮನೆ ಭೇಟಿ ಹಾಗೂ ಬೇಡಿಕೆ ಸ್ವೀಕಾರ ಅಭಿಯಾನ’ ನಡೆಯಲಿದೆ. ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಹಾಗೂ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ವಿಶೇಷ ಚೇತನರಿಂದ ಹೊಸದಾಗಿ ಉದ್ಯೋಗ ಚೀಟಿಗಾಗಿ ಅರ್ಜಿಗಳನ್ನು ಸ್ವೀಕರಿಸಲಾಯಿತು. ಅಲ್ಲದೆ, ವಿವಿಧ ವೈಯಕ್ತಿಕ ಕಾಮಗಾರಿಗಳಿಗೆ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಅಧಿಕೃತ ಆದೇಶ ಪ್ರತಿಯನ್ನು ವಿತರಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಐ.ಇ.ಸಿ ಸಂಯೋಜಕರು, ಸಹಾಯಕ ತಾಂತ್ರಿಕ ಅಭಿಯಂತರರು, ಪಂಚಾಯಿತಿ ಸಿಬ್ಬಂದಿ, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.









