ವಿಜಯ ದರ್ಪಣ ನ್ಯೂಸ್…..
ವಿಕಾಸದ ಹಾದಿ: ‘ವಿಬಿ-ಜಿ ರಾಮ್ ಜಿ’ ಯೋಜನೆ: ಗ್ರಾಮೀಣ ಭಾರತದ ಕಾಯಕಲ್ಪಕ್ಕೆ ಹೊಸ ಸ್ಪರ್ಶ

ತಾವರೆಕೆರೆ : ಹೊಸಕೋಟೆ ತಾಲೂಕಿನ ಲಕ್ಕೊಂಡಹಳ್ಳಿ ಗ್ರಾಮೀಣ ಭಾಗದ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ಹಾಗೂ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ, ಲಕ್ಕೊಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ)’ (VB-G RAM G) ಯೋಜನೆಯಡಿ ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಮೇಳ ಹಾಗೂ ಯೋಜನೆಗಳ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಹೊಸ ಜಾಬ್ ಕಾರ್ಡ್ಗಳ ನೋಂದಣಿ ಮತ್ತು ವಿತರಣೆ:
ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಂದ ಹೊಸ ಜಾಬ್ ಕಾರ್ಡ್ ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಯಿತು. ಸ್ಥಳದಲ್ಲೇ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ಮುಂದಿನ ಪ್ರಕ್ರಿಯೆಗಳಿಗೆ ಕ್ರಮ ಕೈಗೊಳ್ಳಲಾಯಿತು.
ಉದ್ಯೋಗ ಭದ್ರತೆ ಮತ್ತು ಜಾಗೃತಿ:
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ IEC ಸಂಯೋಜಕರು, ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಪ್ರತಿಯೊಬ್ಬರ ಜೀವನೋಪಾಯದ ಮಟ್ಟವನ್ನು ಹೆಚ್ಚಿಸುವಲ್ಲಿ ‘ವಿಕಸಿತ ಭಾರತ ರೋಜಗಾರ್’ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಿದರು.
ಸ್ವಾವಲಂಬನೆಗೆ ಉತ್ತೇಜನ:
ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಭಾರತಿ ದೇವರಾಜ್ ಅವರು ಮಾತನಾಡಿ, “ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಗ್ರಾಮೀಣ ಉದ್ಯೋಗಿಗಳಿಗೆ ಸರ್ಕಾರದ ಮೂಲಕ ಲಭ್ಯವಿರುವ ವಿವಿಧ ಆರ್ಥಿಕ ನೆರವು, ಸೌಲಭ್ಯಗಳು ಹಾಗೂ ಕೈಗೊಳ್ಳಬಹುದಾದ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಗ್ರಾಮದ ಪ್ರತಿಯೊಬ್ಬ ಅರ್ಹ ನಾಗರಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೈಜೋಡಿಸಬೇಕು,” ಎಂದು ಕರೆ ನೀಡಿದರು.
ಈ ವಿಶೇಷ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು, ಅಭಿಯಂತರರು, ಗ್ರಾಮ ಪಂಚಾಯ್ತಿ SDAA, ಕರ ವಸೂಲಿಗಾರರು, DEO, GKM, ಗ್ರಾಮದ ಹಿರಿಯ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.










