ವಿಜಯ ದರ್ಪಣ ನ್ಯೂಸ್…..
ಹೊಸಕೋಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ
ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.12;
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾ ಸೇವಾ ಆಂದೋಲನದ ಭಾಗವಾಗಿ ಇಂದು ತಾಲ್ಲೂಕು ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಹೊಸಕೋಟೆ ಟೌನ್ ನ ಯಾದವ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ತಾಲ್ಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಕುಂದು ಕೊರತೆ, ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಆಲಿಸಿದರು.
ಜನರಿಂದ ಸ್ವೀಕರಿಸಿದ ಅರ್ಜಿಗಳ ಪೈಕಿ ಸ್ಥಳದಲ್ಲೇ ಪರಿಹಾರ ಸಿಗುವ ಅರ್ಜಿಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಬಾಗಿಲಿಗೆ ಬಂತು ಸರ್ಕಾರ ಸರ್ಕಾರದ ಸೇವೆಗೆ ಇರಲಿ ನಿಮ್ಮ ಸಹಕಾರ ಎಂಬ ಧ್ಯೇಯದೊಂದಿಗೆ ಆರಂಭವಾಗಿರುವ ಪ್ರಜಾ ಸೇವಾ ಇಲಾಖೆಯ ಮೂಲಕ ಪ್ರಜಾ ಸೇವಾ ಆಂದೋಲನ ಸಭೆಯನ್ನು ಪ್ರತಿ ಶನಿವಾರ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಸರ್ಕಾರವೇ ಜನರ ಬಳಿಗೆ ಹೋಗಿ ಅವರ ಕುಂದುಕೊರತೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಪ್ರಜಾ ಸೇವಾ ಇಲಾಖೆ ಕೆಲಸ ಮಾಡಲಿದೆ.
ಸಭೆಯಲ್ಲಿ ಸಿಇಒ ಡಾ ವಾಸಂತಿ ಅಮರ್, ಎಸಿ ಮಂಜುನಾಥ್, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.











