ವಿಜಯ ದರ್ಪಣ ನ್ಯೂಸ್….
ಕನ್ಯಾಘಟ್ಟದಲ್ಲಿ 100 ಸಾರಿಗೆ ಬಸ್ಗಳ ಭರವಸೆ :ದೇವಸ್ಥಾನ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಸಚಿವ ಭೈರತಿ ಸುರೇಶ್ ಘೋಷಣೆ

ನಾಗಮಂಗಲ, ಸೆ.13: ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ಸಹೋದರರಾದ ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಉದ್ಯಮಿ ಸ್ಟಾರ್ ಚಂದ್ರು ಹಾಗೂ ವೆಂಕಟೇಶ್ ಅವರ ಸಹಕಾರದಲ್ಲಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಲಾದ ನೂತನ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಬಿ.ಎಸ್. ಭೈರತಿ ಸುರೇಶ್ ಅವರು ಮಂಡ್ಯ ಜಿಲ್ಲೆಗೆ 100 ಹೊಸ ಸಾರಿಗೆ ಬಸ್ಗಳನ್ನು ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, “ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೊಸ ಬಸ್ಗಳನ್ನು ಒದಗಿಸಲಿದೆ. ಮಂಡ್ಯ ಜಿಲ್ಲೆಯ ಗ್ರಾಮೀಣ ಭಾಗಗಳ ಜನರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ” ಎಂದು ತಿಳಿಸಿದರು.
ಸಚಿವರ 100 ಬಸ್ಗಳ ಭರವಸೆಯು ಜಿಲ್ಲೆಯ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಇದೇ ವೇಳೆ ಮಾತನಾಡಿದ ಅವರು, “ಆದಿಚುಂಚನಗಿರಿ ಕ್ಷೇತ್ರವು ಜಾತಿ-ಧರ್ಮ ಬೇಧ-ಭಾವವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಜಾತ್ಯತೀತ ಹಾಗೂ ಸರ್ವಜನಾಂಗದ ಶ್ರದ್ಧಾ ಕೇಂದ್ರವಾಗಿ ಗುರುತಿಸಿಕೊಂಡಿದೆ” ಎಂದು ಬಣ್ಣಿಸಿದರು.
ವೇದಿಕೆಯಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಎನ್. ಚಲುವರಾಯಸ್ವಾಮಿ, ಶಾಸಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.











