ವಿಜಯ ದರ್ಪಣ ನ್ಯೂಸ್…..
ತಾವರೆಕೆರೆಯಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಮಾದರಿಯಲ್ಲಿ ಗಣೇಶ ಪ್ರತಿಷ್ಠಾಪನೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಇಂದಿರಾನಗರದಲ್ಲಿ ಶ್ರೀ ಗಜಾನನ ವಿನಾಯಕ ಗೆಳೆಯರ ಬಳಗದ ವತಿಯಿಂದ ಈ ಬಾರಿಯ ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.
ಗಣೇಶ ಚತುರ್ಥಿಯ ಅಂಗವಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಶೈಲಿಯಲ್ಲಿ ಸುಂದರವಾದ ದೇವಾಲಯದ ಮಾದರಿಯನ್ನು ನಿರ್ಮಿಸಿ, ಅದರಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ವಿಶೇಷ ಅಲಂಕಾರ ಹಾಗೂ ಆಕರ್ಷಕ ವಿನ್ಯಾಸದಿಂದ ದೇವಾಲಯದ ಮಾದರಿ ಭಕ್ತರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಶ್ರೀ ಗಜಾನನ ವಿನಾಯಕ ಗೆಳೆಯರ ಬಳಗವು ಹಲವು ವರ್ಷಗಳಿಂದ ನಿರಂತರವಾಗಿ ಗಣೇಶ ಚತುರ್ಥಿಯನ್ನು ಆಚರಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಒಂಬತ್ತು ದಿನಗಳ ಕಾಲ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಂಡಿದೆ. ಹಬ್ಬದ ಅಂಗವಾಗಿ ಪ್ರತಿದಿನವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಳಗದ ಆಡಳಿತ ಮಂಡಳಿ ತಿಳಿಸಿದೆ.
ವಿಶೇಷವಾಗಿ ಅಯ್ಯಪ್ಪ ಸ್ವಾಮಿ ದೇವಾಲಯದ ಶೈಲಿಯಲ್ಲಿ ನಿರ್ಮಿಸಿರುವ ಅಲಂಕಾರ ಹಾಗೂ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಈ ವಿಶೇಷ ಅಲಂಕಾರವನ್ನು ವೀಕ್ಷಿಸಲು ತಾವರೆಕೆರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಆಗಮಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಗಣೇಶ ಚತುರ್ಥಿಯ ಒಂಬತ್ತು ದಿನಗಳ ಕಾಲ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸುವಂತೆ ಶ್ರೀ ಗಜಾನನ ವಿನಾಯಕ ಗೆಳೆಯರ ಬಳಗದ ಆಡಳಿತ ಮಂಡಳಿ ಮನವಿ ಮಾಡಿದೆ.










