ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ ,
ಶಿಡ್ಲಘಟ್ಟ : ಮಕ್ಕಳಿಗೆ ಬಿಸಿ, ಶುಚಿ ಹಾಗೂ ಪೌಷ್ಟಿಕ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಮೂಲಕ ಅವರ ಆರೋಗ್ಯಕರ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದ್ದು ಬಿಸಿಯೂಟ ನೌಕರರು ಮಕ್ಕಳ ಪೌಷ್ಟಿಕತೆ ಹಾಗೂ ಆರೋಗ್ಯದ ರಕ್ಷಕರಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್ತಿಳಿಸಿದರು.
ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಗೌರಿ ಗಣೇಶ ಹಬ್ಬದ ಅಂಗವಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಅವರು
ಮಾತನಾಡಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಎಸ್.ಎಂ.ಸರೋಜ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಇದು ಹೆಚ್ಚಿನ ಪ್ರೋತ್ಸಾಹ ನೀಡಿದೆ ಬಿಸಿಯೂಟ ನೌಕರರು ಶಾಲೆಯ ಅವಿಭಾಜ್ಯ ಅಂಗವಾಗಿದ್ದಾರೆ ಎಂದು ಹೇಳಿದರು.
ಬಡ ಕುಟುಂಬಗಳ ಮಕ್ಕಳಿಗೆ ಬಿಸಿಯೂಟ ಯೋಜನೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಯೋಜನೆಯಿಂದ ಶಾಲಾ ದಾಖಲಾತಿ ಹೆಚ್ಚುವುದರ ಜತೆಗೆ ಶಾಲೆಯಿಂದ ಮಧ್ಯದಲ್ಲೇ ಹೊರಗುಳಿಯುವ ಮಕ್ಕಳ ಸಂಖ್ಯೆಯೂ ಕಡಿಮೆಯಾಗಿದೆ ಎಂದರು.
ಮುಖ್ಯಶಿಕ್ಷಕ ಎಚ್.ಎಂ.ಭಾಸ್ಕರ್ ಮಾತನಾಡಿ, ಶಾಲೆಯಲ್ಲಿ ವಿವಿಧ ಜಾತಿ, ಧರ್ಮಗಳ ಮಕ್ಕಳು ಒಟ್ಟಿಗೆ ಕುಳಿತು ಊಟ ಮಾಡುವುದರಿಂದ ಸಮಾನತೆಯ ಮನೋಭಾವ ಬೆಳೆಯುತ್ತದೆ ಮಕ್ಕಳಿಗೆ ಶ್ರದ್ಧೆಯಿಂದ ಬಿಸಿಯೂಟ ತಯಾರಿಸಿ ನೀಡುತ್ತಿರುವ ಅಡುಗೆ ಸಿಬ್ಬಂದಿಯ ಸೇವೆ ಶ್ಲಾಘನೀಯವಾದದು ಎಂದರು.
ಈ ವೇಳೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.