ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ

ವಿಜಯ ದರ್ಪಣ ನ್ಯೂಸ್…

ಲೋಕಸಭಾ ಸಾರ್ವತ್ರಿಕ ಚುನಾವಣೆ-2024

ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 29 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಏಣಿಕೆ ಕಾರ್ಯ ಜೂನ್ 4 ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಜೂನ್. 03 ರ ಸಂಜೆ 6:00 ಗಂಟೆಯಿಂದ ಜೂನ್ 05 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸಕ್ತ ವಿದ್ಯಾಮಾನಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯ ಮತ ಎಣಿಕೆಯನ್ನು ನಡೆಸುವ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ವಿಧಿಸುವುದು ಅವಶ್ಯವಾಗಿದೆ.

ಷರತ್ತುಗಳು:-

1. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ.

2. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಯ್ಯುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.

3. ಗೆದ್ದ ಅಭ್ಯರ್ಥಿಗಳ ಮೆರವಣಿಗೆ ಹಾಗೂ ಪಟಾಕಿ/ಬಾಣ/ಬಿರುಸುಗಳನ್ನು ಹಚ್ಚುವುದು ಸಾರ್ವಜನಿಕ ಸಭೆ ಸಮಾರಂಭಗಳು, ಗೆಲುವಿನ ಸಂಭ್ರಮಗಳನ್ನು ನಡೆಸಬಾರದು.

4. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಮೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು. ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಬಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

5. ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ/ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ.

6. ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡಬಹುದಾಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.

7. ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಿದೆ.

8. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ನಿಂದಿಸುವಂತಹ/ ಅವಹೇಳನಾಕಾರಿಯಾದಂತಹ ಯಾವುದೇ ಘೋಷಣೆಗಳು, ಭಾಷಣಾ ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಕೆ, ಆವೇಶಕಾರಿ/ ಪ್ರಚೋದನಾಕಾರಿ ಭಾಷಣಾ ಗಾಯನ ಇತ್ಯಾದಿ ಚಟುವಟಿಗಳನ್ನು ನಿಷೇಧಿಸಿದೆ.

9. ಚುನಾವಣಾ ಆಯೋಗದ ನಿರ್ದೇಶನದಂತೆ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇದಿಸಿರುವ ಪ್ರದೇಶದಲ್ಲಿ ಪ್ರವೇಶಿಸುವುದು ನಿಷೇಧಿಸಿದೆ.

10. ಈ ನಿಷೇದಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವ ಸಂಸ್ಕಾರಕ್ಕೆ ಹಾಗೂ ಚುನಾವಣಾ ಸಂಬಂಧ ಏರ್ಪಡಿಸಲಾಗಿರುವ ಮತ ಕೇಂದ್ರಕ್ಕೆ ಅನ್ವಯಿಸುವುದಿಲ್ಲ.
ಈ ಆದೇಶದ ಅನುಪಾಲನೆಗೆ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಉಪ ಪೊಲೀಸ್ ಆಯುಕ್ತರು, ಈಶಾನ್ಯ ವಲಯ, ಬೆಂಗಳೂರು ರವರು ಕಟ್ಟುನಿಟ್ಟಿನ ಕ್ರಮ ವಹಿಸುವುದು. ತಪ್ಪಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.