--Ads--

ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್

On: June 16, 2025 12:48 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಬೆಂಬಲವಾಗಿ ನಿಲ್ಲಲು ವಾರ್ಷಿಕ 6000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 1,70,000 ರೈತರಿದ್ದು ಕಳೆದ ಸಾಲಿನಲ್ಲಿ 63,375 ರೈತರು ಮಾತ್ರ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ಈ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಕೈಗೊಳ್ಳುವ ಮೂಲಕ ಕ್ಷೇತ್ರ ಭೇಟಿ ನೀಡಿ ಸೌಲಭ್ಯ ವಂಚಿತ ರೈತರ ಸಮಸ್ಯೆ ಆಲಿಸಿ, ಅದನ್ನು ಬಗೆ ಹರಿಸುವ ಮೂಲಕ ಅರ್ಹ ಪ್ರತಿಯೊಬ್ಬ ರೈತನಿಗೂ ಈ ಯೋಜನೆಯ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆ ಮಾಡಿಸುವುದರಿಂದ ಬೆಳೆ ನಷ್ಟವನ್ನು ವಿಮೆ ಮೂಲಕ ಪಡೆಯಬಹುದು. ಈ ಬಗ್ಗೆ ರೈತರಿಗೆ ಮನವರಿಕೆ ಮಾಡುವ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ನೋಂದಣಿ ಹೆಚ್ಚಿಸಿ ಎಂದರು.

ಕಿಸಾನ್ ಕ್ರೆಡಿಟ್ ಕಾರ್ಡ್ ನ ಸದುಉಪಯೋಗ ಪಡೆಯಿರಿ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯು ರೈತರಿಗೆ ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆ ಕೈಗೊಳ್ಳಲು ಬ್ಯಾಂಕಿಂಗ್ ವ್ಯವಸ್ಥೆಯಿಂದ ಸಾಕಷ್ಟು ಮತ್ತು ಸಕಾಲಿಕ ಸಾಲ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ.

ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ಸಾಕಷ್ಟು ಮತ್ತು ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯನ್ನು ಪರಿಚಯಿಸಲಾಯಿತು. ಕೇಂದ್ರ ಸರ್ಕಾರವು ರೈತರಿಗೆ 2% ಬಡ್ಡಿ ಸಬ್ವೆನ್ಷನ್ ಮತ್ತು 3% ತ್ವರಿತ ಮರುಪಾವತಿ ಪ್ರೋತ್ಸಾಹವನ್ನು ನೀಡುತ್ತದೆ, ಹೀಗಾಗಿ ಸಾಲವು ವಾರ್ಷಿಕ 4% ಸಬ್ಸಿಡಿ ದರದಲ್ಲಿ ಲಭ್ಯವಾಗುತ್ತಿದೆ. ಈ ಯೋಜನೆ ಬಗ್ಗೆ ರೈತರಿಗೆ ಹೆಚ್ಚಿನ ಜಾಗೃತಿ ಮೂಡಿಸಿ ಹೆಚ್ಚು ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮಾಡಿಸಲು ಅಗತ್ಯ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜೆ.ಜೆ.ಎಂ ಕಾಮಗಾರಿಗೆ 968 ಕೋಟಿ ಅನುದಾನ

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಕಲ್ಪಿಸುವ ದೃಷ್ಟಿಯಿಂದ ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಗೆ 968.15 ಕೋಟಿ ಅನುದಾನ ಬಿಡುಗಡೆ ಆಗಿದೆ. 616 ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿದೆ. ಕಾಮಾಗಾರಿ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಖುದ್ದು ಪರಿಶೀಲನೆ ನೆಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ 770 ಶುದ್ಧ ಕುಡಿಯುವ ನೀರು ಘಟಕಗಳಿದ್ದು 4 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಬಂದಿದೆ. 1000 ಕ್ಕಿಂತ ಅಧಿಕ ಜನ ವಾಸಿಸುವ ಗ್ರಾಮಗಳಲ್ಲಿ ಹೆಚ್ಚುವರಿಯಾಗಿ ಇನ್ನೊಂದು ಘಟಕ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿ. ಅಂಗನವಾಡಿ, ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್, ಸಾರ್ವಜನಿಕ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರು ಘಟಕಗಳನ್ನು ಖಡ್ಡಾಯವಾಗಿ ಕಾಲಕಾಲಕ್ಕೆ ಪರೀಕ್ಷೆ ನಡೆಸಿ ಎಂದರು.

ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ ಬಹುದಿನಗಳಿಂದ ಸಮಸ್ಯೆ ಆಗಿಯೇ ಉಳಿದಿದೆ. ಕೊಳವೆ ಬಾವಿಗಳಲ್ಲಿ ನೀರು ಕಡಿಮೆ ಆಗಿದೆ. ವಾರಕ್ಕೆ, 15 ದಿನಕ್ಕೊಮ್ಮೆ ನೀರು ಸಿಗುತ್ತಿದ್ದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಪರಿಹಾರ ಕಂಡುಹಿಡಿದು ನೀರಿನ ಬವಣೆ ನೀಗಿಸಲು ಕ್ರಮ ವಹಿಸಿ ಎಂದರು.

ಆಯುಷ್ಮಾನ್ ಕಾರ್ಡ್ ಪ್ರತಿಯೊಬ್ಬರಿಗೂ ತಲುಪವಂತೆ ಕ್ರಮ ವಹಿಸಿ. ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ 5 ಲಕ್ಷ ರೂಪಾಯಿಗಳ ಉಚಿತ ವೈದ್ಯಕೀಯ ಸೌಲಭ್ಯ ಸಿಗುತ್ತದೆ. ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತಾಗಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಬಗ್ಗೆ ದೂರು ಬಂದಿದ್ದು ಔಷಧಿ ಕೊರತೆ ಉಂಟಾದ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಎಂದರು.

ಕೇಂದ್ರ ವಸತಿ ಶಾಲೆ, ನಿಲಯಗಳಿಗೆ ಪ್ರಸ್ತಾವನೆ ಸಲ್ಲಿಸಿ

ಕೇಂದ್ರ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆ ಇಲ್ಲ. ಜಿಲ್ಲೆಯಿಂದ ಇದುವರೆಗೆ ಯಾವುದೇ ಇಲಾಖೆಯಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ವಸತಿ ಶಾಲೆ, ನಿಲಯಗಳ ಸ್ಥಾಪನೆ, ವೃದ್ಧಾಪ್ಯ ವೇತನ, ಅನಾಥಾಶ್ರಮ, ಮನೆ ನಿರ್ಮಾಣ, ಶೀಥಲ ಶೇಖರಣಾ ಕೇಂದ್ರ, ಮಲ್ಟಿ ಟಾಸ್ಕಿಂಗ್ ಮಾರ್ಕೆಟಿಂಗ್ ಸೆಂಟರ್ ಈ ಎಲ್ಲವನ್ನೂ ಸ್ಥಾಪಿಸಲು ಅವಕಾಶವಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸಿ, ಕೇಂದ್ರದಲ್ಲಿ ಅನುಮೋದನೆ ಮಾಡಿಸುತ್ತೇನೆ ಎಂದರು. ಆದರ್ಶ ಗ್ರಾಮ ಯೋಜನೆಯಡಿ ಜಿಲ್ಲೆಯಲ್ಲಿ 14 ಗ್ರಾಮ ಆಯ್ಕೆ ಆಗಿದ್ದು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ ಆದಾಯ ದ್ವಿಗುಣಗೊಳಿಸುವುದು, ಮಹಿಳೆಯರ ಸಬಲೀಕರಣ, ಆರೋಗ್ಯ ಕ್ಷೇತ್ರ, ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರ ಹಾಗೂ ಇತರೆ ಕ್ಷೇತ್ರಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ಹಲವು ಜನಪರ ಯೋಜನೆಗಳು ಜಾರಿಗೆ ತರಲಾಗಿದೆ. ಅಂತಹ ಕೇಂದ್ರ ಪುರಸ್ಕೃತ ಸರ್ಕಾರದ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಫಲಾನುಭವಿಗೆ ತಲುಪಲು ಅಧಿಕಾರಿಗಳ ಸಮನ್ವಯತೆ ಮತ್ತು ಕಾರ್ಯಕ್ಷಮತೆ ಮುಖ್ಯ. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now